ಮಂಡ್ಯ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಜನರ ಜೀವ ಹಾನಿ ಆಗುವುದಕ್ಕೂ ಮುಂಚೆ ಚಿರತೆಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.
ವಿಶ್ವವಿಖ್ಯಾತ ಕೆಆರ್ಎಸ್ ಜಲಾಶಯದ ಬಳಿ ಚಿರತೆ ಕಾಣಿಸಿಕೊಂಡಿದೆ.ಜಿಲ್ಲೆಯ ಹಲವೆಡೆ ನಿಯಮಿತವಾಗಿ ಚಿರತೆಗಳು ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು, ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಭೀತರಾಗಿದ್ದು, ಸಾಕು ಪ್ರಾಣಿಗಳ ರಕ್ಷಣೆ ಮಾಡಲು ಸಂಕಷ್ಟ ಪಡುತ್ತಿದ್ದಾರೆ.
ಅರಣ್ಯ ಇಲಾಖೆಯು ಪ್ರಸ್ತುತ ಮುಖ್ಯಮಂತ್ರಿಯವರ ಬಳಿಯೇ ಇರುವುದರಿಂದ ತುರ್ತಾಗಿ ಕ್ರಮ ಕೈಗೊಂಡು ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗಬೇಕಿದೆ. ಜತೆಗೆ ಚಿರತೆಗಳು ಕಾಣಿಸಿಕೊಂಡಾಗ ಯಾವ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸುವ ಕೆಲಸವೂ ಆಗಬೇಕಿದೆ.
ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆಯನ್ನು ಹಿಡಿಯಲು ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇಡುವ ಮೂಲಕ ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಆದೇಶಿಸಬೇಕೆಂದು ಸಿಎಂಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.