ಮದ್ದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾಸಕ ಡಿ.ಸಿ.ತಮ್ಮಣ್ಣ ತಮ್ಮ ಜನ್ಮದಿನವಾದ ಇಂದು ಸಾವಿರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮೊದಲು,ತಮ್ಮ ಮನೆ ದೇವರು ಕೊಪ್ಪ ಹೋಬಳಿಯ ಆಬಲವಾಡಿ ತೋಪಿನ ತಿಮ್ಮಪ್ಪ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ತರುವಾಯ ಮದ್ದೂರು ಪಟ್ಟಣದಲ್ಲಿರುವ ಶ್ರೀ ಮದ್ದೂರಮ್ಮ ದೇವಸ್ಥಾನದಲ್ಲಿ ಪತ್ನಿ ಪ್ರಮೀಳಾ, ಪುತ್ರಿ ಸೌಮ್ಯ ರಮೇಶ್,ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದರು. ಸಮೀಪದಲ್ಲಿದ್ದ ಜೆಡಿಎಸ್ ನಾಯಕ ಎಂ.ಎಸ್.ಸಿದ್ದರಾಜು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು.
ನಂತರ ಪಟ್ಟಣದ ಹೊಳೆ ಆಂಜನೇಯ ಹಾಗೂ ಉಗ್ರ ನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ
ಡಿ.ಸಿ. ತಮ್ಮಣ್ಣ ಅವರು ನಂತರ ಸಾವಿರಾರು ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಆರ್. ನಾಗರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಧರ್ಮಪತ್ನಿ ಪ್ರಮೀಳಾ, ಪುತ್ರಿ ಸೌಮ್ಯ ರಮೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಮುಖಂಡ ರಾಜಣ್ಣ ಉಪಸ್ಥಿತರಿದ್ದರು.
ಅಭಿವೃದ್ಧಿಗಾಗಿ ಆಶೀರ್ವದಿಸಿ
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಸಿ.ತಮ್ಮಣ್ಣ, ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ನನ್ನ ಮೇಲೆ ವಿಶ್ವಾಸವಿರಿಸಿ ಬಿ.ಫಾರಂ ನೀಡಿದ್ದಾರೆ. ಮದ್ದೂರು ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕುಮಾರಸ್ವಾಮಿ ಅವರ ಜಾರಿಗೆ ತರಲು ಉದ್ದೇಶಿಸಿರುವ ಪಂಚರತ್ನ ಯೋಜನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇನೆ. ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಅಭಿವೃದ್ಧಿಗಾಗಿ ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಕೋರುತ್ತೇನೆ ಎಂದರು.
ಕಾರ್ಯಕರ್ತರ ಸಂಭ್ರಮ
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಕಾರ್ಯಕರ್ತರು ಹಸಿರು ಶಾಲು ಹೊದ್ದಿದ್ದ ಡಿ.ಸಿ.ತಮ್ಮಣ್ಣ ಪರ ಜೈ ಕಾರ ಮೊಳಗಿಸಿ ಸಂಭ್ರಮಿಸಿದರು.ಪೂಜಾ ಕುಣಿತ, ಡೊಳ್ಳು ಕುಣಿತ,ಗಾರುಡಿ ಗೊಂಬೆ,ವೀರಗಾಸೆ ಸೇರಿದಂತೆ ಮೊದಲಾದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.