ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಿ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವುದು ನನ್ನ ಮೊದಲ ಆದ್ಯತೆ ಎಂದು ಮೇಲುಕೋಟೆ ಯುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಕುಳಿಯಿಂದ ಮಾಡುವ ಗಣಿಗಾರಿಕೆಗೆ ನಮ್ಮ ವಿರೋಧವಿಲ್ಲ, ಆದರೆ ದೊಡ್ಡ ಮಟ್ಟದಲ್ಲಿ ಸ್ಪೋಟಕಗಳನ್ನು ಉಪಯೋಗಿಸಿ ಮಾಡುವ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಸ್ಪಷ್ಟಪಡಿಸಿದರು.
ಕ್ಷೇತ್ರದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ, ಕ್ಷೇತ್ರದಲ್ಲಿ ಯಾವುದೇ ಗಲಭೆಗಳಿಗೆ ಅವಕಾಶ ನೀಡಬೇಕು. ಎಲ್ಲರೂ ಶಾಂತಿಯುತವಾಗಿ ಬದುಕಬೇಕು. ಬೇಕೆಂದೆ ಗಲಭೆ ಸೃಷ್ಠಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದ ಅವರು, ಆಸ್ಪತ್ರೆಗಳಲ್ಲಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಲಾಗುವುದು ಎಂದರು.
ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ, ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುವಂತೆ ಮಾಡುವುದು, ಒಂದು ಬಾರಿ ಸಾಲ ಮನ್ನಾ ಮಾಡಿದ ನಂತರ ಮತ್ತೇ ಸಾಲ ಮಾಡದಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಗಮನಹರಿಸಲಾಗುವುದು. ಅಲ್ಲದೇ ರೈತರ ಬೆಳೆಗಳಿಗೆ ಬೆಂಬಲ ಬೆಲೆ ದೊರಕಿಸಿಕೊಡಲು ಹೋರಾಟ ಮಾಡಲಾಗುವುದೆಂದರು.
ಗೆಲುವು ಸವಾಲಾಗಿತ್ತು
ಅನುಭವಿ ಹಾಗೂ ಬಲಿಷ್ಠ ರಾಜಕಾರಣಿ ಸಿ.ಎಸ್.ಪುಟ್ಟರಾಜು ಅವರ ವಿರುದ್ಧ ನನ್ನಂತ ಯುವಕ ಗೆಲ್ಲುವುದು ಒಂದು ಸವಾಲಾಗಿತ್ತು. ರೈತಸಂಘ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಗಲಿರುಳು ದುಡಿದಿದ್ದರಿಂದ ಇದು ಸಾಧ್ಯವಾಗಿತು.ನನ್ನ ಮೇಲೆ ನಂಬಿಕೆಗೆ ಇಟ್ಟು ಗೆಲ್ಲಿಸಿದ ಕ್ಷೇತ್ರದ ಜನತೆಯ ನಂಬಿಕೆಯನ್ನು ಉಳಿಸಿಕೊಂಡು ಅಭಿವೃದ್ದಿಗೆ ಶ್ರಮಿಸುತ್ತೇನೆ. ನನ್ನ ಗೆಲುವಿಗೆ ದುಡಿದ ಎಲ್ಲಾ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆಂದರು.
ಗೋಷ್ಠಿಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ರೈತ ಮುಖಂಡರಾದ ಲಿಂಗಪ್ಪಾಜಿ, ಬಾಲಚಂದ್ರು, ಪ್ರಸನ್ನ ಎನ್ ಗೌಡ, ಕೆನ್ನಾಳು ನಾಗರಾಜು, ಹರವು ಪ್ರಕಾಶ್, ಶಿವಳ್ಳಿ ಚಂದ್ರು ಉಪಸ್ಥಿತರಿದ್ದರು.