ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದರೂ ರೈತರ ಹಿತ ಕಾಪಾಡಲು ಮುಂದಾಗದೆ ನಿರ್ಲಕ್ಷ್ಯ ವಹಿಸಿರುವ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಜಿಲ್ಲಾ ರೈತ ರಕ್ಷಣಾ ಸಮಿತಿಯ ಸರದಿ ಉಪವಾಸಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಶಿವರಾಜ್ ಮರಳಿಗ, ಜಿಲ್ಲಾ ಸಂಚಾಲಕ ಶ್ರೀನಿವಾಸ್,ಜಿಲ್ಲಾ ಸಂಘಟನಾ ಸಂಚಾಲಕ ಶಂಕರ್, ದೇವರಾಜ್, ತಿಮ್ಮೇಶ್, ಅಪ್ಪಾಜಿ, ಮಾದೇವಿ ಉಪವಾಸ ಕೂತು ಹೋರಾಟ ಬೆಂಬಲಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರ್ತಿ ಸುನಂದ ಜಯರಾಂ ಮಾತನಾಡಿ, ಕೆ ಆರ್ ಎಸ್ ಜಲಾಶಯ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುತ್ತಿರುವ ಸನ್ನಿವೇಶದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಕೊಳ್ಳದಲ್ಲಿ ಸಾಕಷ್ಟು ಪ್ರತಿಭಟನೆ ಧರಣಿ ಉಪವಾಸ ಚಳವಳಿ ನಡೆದಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮನೋಭಾವ ತಾಳಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಬೇಕು ಸಂಕಷ್ಟ ಸೂತ್ರ ರಚಿಸುವ ಮೂಲಕ ಶಾಶ್ವತ ಪರಿಹಾರ ದೊರಕಿಸಬೇಕೆಂದು ಆಗ್ರಹಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ ರೈತ ಸಂಘದ ಇಂಡುವಾಳು ಚಂದ್ರಶೇಖರ್, ದಸಂಸ ಎಂ ವಿ ಕೃಷ್ಣ ಹುರುಗಲವಾಡಿ ರಾಮಯ್ಯ ಎಂ.ಎಲ್ ತುಳಸೀಧರ್ ಮತ್ತಿತರರಿದ್ದರು.