ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ ಕೃಷ್ಣಪ್ಪ ಬಣದ ವತಿಯಿಂದ ದಲಿತ ಚಳವಳಿ 50ನೇ ಸುವರ್ಣ ಮಹೋತ್ಸವ ಹಾಗೂ 86ನೇ ಪ್ರೊ.ಕೃಷ್ಣಪ್ಪ ಜನ್ಮದಿನಾಚರಣೆ ಮತ್ತು ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶವನ್ನು ಹಾಸನದ ಅಂಬೇಡ್ಕರ್ ಭವನದಲ್ಲಿ ಜೂನ್ 29ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಮಂಡ್ಯ ಜಿಲ್ಲಾಧ್ಯಕ್ಷ ಎಂ ಶಿವು ತಿಳಿಸಿದರು.
ಮಂಡ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ನಡೆಯುವ ಕಾರ್ಯಕ್ರಮವನ್ನು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ ಎಂದರು .
ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್ ಅವರು ಪ್ರೊ.ಬಿ ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಸಂಘಟನೆಯ ರಾಜ್ಯ ಸಂಚಾಲಕ ಎಂ ಸೋಮಶೇಖರ್ ಅಧ್ಯಕ್ಷತೆ ವಹಿಸುವರು ಎಂದರು.
ಇದೇ ಸಂದರ್ಭದಲ್ಲಿ ಕಲ್ಬುರ್ಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್, ಬಿಕೆ ಪ್ರಶಸ್ತಿ ಪುರಸ್ಕೃತರಾದ ಇಂದಿರಾ ಕೃಷ್ಣಪ್ಪ ಮುಖ್ಯ ಭಾಷಣ ಮಾಡಲಿದ್ದು ,ಮುಖ್ಯ ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ಅಂದಾನಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದು ಮಂಡ್ಯ ಜಿಲ್ಲೆಯಿಂದ 500 ಮಂದಿ ಭಾಗವಹಿಸುವುದಾಗಿ ತಿಳಿಸಿದರು.
ಗೋಷ್ಠಿಯಲ್ಲಿ ಮದ್ದೂರು ತಾಲೂಕು ಸಂಘಟನಾ ಸಂಚಾಲಕ ನಿರಂಜನ್ , ಗಿರೀಶ್, ಉಮೇಶ್ ಹಾಗೂ ರಾಜೇಶ್ ಉಪಸ್ಥಿತರಿದ್ದರು.