ಇತ್ತೀಚೆಗೆ ರಾಜಕೀಯಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್ ಅಧಿಕಾರಿಗಳು, ಗೂಂಡಾಗಳು ಬರುತ್ತಿರುವುದನ್ನು ನೋಡಿದರೆ ರಾಜಕೀಯದಲ್ಲಿರುವ ಸಂಪಾದನೆ ಬೇರೆಲ್ಲೂ ಇಲ್ಲ ಅನಿಸುತ್ತದೆ. ರಾಜಕೀಯ ವ್ಯವಸ್ಥೆಯಲ್ಲಿ ಸುಧಾರಣೆಗಳು ಆಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತದಾರರ ಮಾಹಿತಿ ಸಂಗ್ರಹ, ಪ್ರಿ ಪೋಲ್ ಸರ್ವೇ, ಮತದಾರರ ಪಟ್ಟಿಯಲ್ಲಿ ಅವ್ಯವಹಾರಗಳು ದಿನೇ ದಿನೇ ಹೆಚ್ಚುತ್ತಿವೆ. ಅಲ್ಲದೆ, ರಾಜಕೀಯಕ್ಕೆ ಬರುತ್ತಿರುವ ಗೂಂಡಾಗಳ ಸಂಖ್ಯೆಯೂ ಹೆಚ್ಚುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.
“ಇತ್ತೀಚಿಗೆ ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅವ್ಯವಹಾರವು ಸಂವಿಧಾನಕ್ಕೆ ಮತ್ತು ರಾಷ್ಟ್ರದ ಕಾನೂನಿಗೆ ವಿರುದ್ಧವಾದುದು” ಎಂದು ಅಸಮಾಧಾನ ವ್ಯಕ್ತಪಡಿಸಿದರು. “ಚುನಾವಣಾ ಆಯೋಗ ಒಂದು ಸ್ವತಂತ್ರ ಸಂಸ್ಥೆ. ಆಯೋಗದಲ್ಲಿ ಇಂತಹ ಅವ್ಯವಹಾರ ನಡೆಯುತ್ತಿರುವುದು ನೋಡಿದಾಗ ಪ್ರಜಾಪ್ರಭುತ್ವ ಎಲ್ಲಿಗೆ ಹೋಗುತ್ತಿದೆ ಎಂಬ ಅನುಮಾನ ಕಾಡುತ್ತದೆ” ಎಂದು ವಿಷಾದಿಸಿದರು.