ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿ ರೈತರು ಸಂಕಷ್ಟದಲ್ಲಿದ್ದು, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ( ಮೂಲ ಸಂಘಟನೆ ) ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗ ಮನವಿ ಸಲ್ಲಿಸಿದೆ.
ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ 15ದಿನಗಳ ಕಾಲ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯಕ್ಕೆ ಸೂಚಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಅವೈಜ್ಞಾನಿಕವಾಗಿದೆ ಎಂದು ಕಿಡಿಕಾರಿದರು.
ಕೆ.ಆರ್.ಎಸ್. ಅಣಿಕಟ್ಟೆಯಲ್ಲಿ 113 ಅಡಿ ನೀರು ಶೇಖರಣಿಯಾಗಿದ್ದಾಗ ನೀರಾವರಿ ಸಲಹೆ ಸಮಿತಿಯ ತೀರ್ಮಾನದಂತೆ ಕಾವೇರಿ ಜಲಾನಯನ ಪ್ರದೇಶದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ಬೆಳೆಗಳಗೆ ನೀರು ಹರಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ರಾಜ್ಯ ಸರ್ಕಾರಕಾವೇರಿ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ದಿನಕ್ಕೆ 15 ಸಾವಿರ ಕ್ಯೂಸೆಸ್ ನೀರನ್ನು ಹರಿಸಿದ ಪರಿಣಾಮ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ ಇದೀಗ. ಮತ್ತೆ ಪ್ರತಿದಿನ 5 ಸಾವಿರ ಕ್ಯೂಸೆಸ್ ನೀರನ್ನು ತಮಿಳು ನಾಡಿಗೆ ಹರಿಸಬೇಕು ಎಂದು ಹೇಳಿರುವುದು ಅವಜ್ಞಾನಿಕ. ಇದರ ಪರಿಣಾಮ ಕಾವೇರಿ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಗೌರವಾಧ್ಯಕ್ಷ ಬೋರಾಪುರ ಶಂಕರೇಗೌಡ, ಪ್ರಧಾನ ಕಾರ್ಯದರ್ಶಿ ಎಸ್ ಮಂಜೇಶ್ ಗೌಡ, ರಾಮಲಿಂಗೇಗೌಡ, ಸೋ, ಸಿ ಪ್ರಕಾಶ್, ಇಂಡುವಾಳು ಬಸವರಾಜ್, ವೈ,ಕೆ ರಾಮೇಗೌಡ, ಬೋರಲಿಂಗೇಗೌಡ ಮತ್ತಿತರರಿದ್ದರು.
ಕೆಆರ್’ಎಸ್ ನಲ್ಲಿ ಬಾಯಿ ಬಡಿದುಕೊಂಡು ಪ್ರತಿಭಟನೆ
ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಸಮಿತಿ ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.
ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿ ತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಜಲಾಶಯದ ಎದುರು ನೂರಾರು ರೈತರು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟಿಸಿ ಕರ್ನಾಟಕದ ರಾಜ್ಯದ ರೈತರಿಗೆ ಆಗುತ್ತಿರುವ ನಿರಂತರ ಅನ್ಯಾಯ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.