ರಾಜ್ಯದ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಿಸದೇ ಈಗಾಗಲೇ ಒಂದು ತಿಂಗಳು ಕಳೆಯುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಅಸಂಖ್ಯಾತ ಬಡ ವಿದ್ಯಾರ್ಥಿಗಳು ಇದರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಿದ್ದು ರಾಜ್ಯ ಸರ್ಕಾರವು ಹಣಕಾಸು ಕೊರತೆಯ ನೆಪವೊಡ್ಡಿ ವಿತರಣೆಯಲ್ಲಿ ವಿಳಂಬ ಮಾಡಿರುವುದು ಖಂಡನಾರ್ಹ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ತಿಳಿಸಿದೆ.
ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವುದು ಏಕೈಕ ದಾರಿಯಾಗಿದೆ ಹಾಗೂ ಮೊಟ್ಟೆ ನೀಡುವ ದಿನಗಳಲ್ಲಿ ಹಾಜರಾತಿ ಹೆಚ್ಚಿರುವುದು ಅದರ ಮೇಲಿನ ಅವಲಂಬನೆ ಎಷ್ಟಿದೆ ಎಂಬುದನ್ನು ಎತ್ತಿತೋರಿಸುತ್ತದೆ ಎಂದು AIDSO ಮಂಡ್ಯ ಜಿಲ್ಲಾ ಸಂಚಾಲಕಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಡ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಯಾವುದೇ ಸರ್ಕಾರದ ಆದ್ಯ ಜವಾಬ್ದಾರಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈ ಕೂಡಲೇ ಮಕ್ಕಳಿಗೆ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.