ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನಿಂದ ಕೆ ಆರ್ ಎಸ್ ಮುತ್ತಿಗೆಗೆ ತೆರಳುತ್ತಿದ್ದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ರೈತರಿಗೆ ದ್ರೋಹ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ರಕ್ತ ಚೆಲ್ಲುತ್ತೇವೆ ಕಾವೇರಿ ಉಳಿಸುತ್ತೇವೆ, ನೀರು ನಿಲ್ಲಿಸಿದರೆ ಶಾಂತಿ ನೀರು ಬಿಟ್ಟರೆ ಕ್ರಾಂತಿ ಎಂಬ ಘೋಷಣೆ ಮೊಳಗಿಸಿದರು.
ಕೆ ಆರ್ ಎಸ್ ಜಲಾಶಯದಿಂದ ರಾತ್ರೋರಾತ್ರಿ ನೀರು ಬಿಡುವ ಮೂಲಕ ರೈತ ವಿರೋಧಿ ಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಮರಣ ಶಾಸನ ಬರೆದಿದೆ, ಕಾವೇರಿ ಕೊಳ್ಳದ ಜಲಾಶಯ ಭರ್ತಿಯಾಗಿಲ್ಲ, ಇಲ್ಲಿನ ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಸಾಕಾಗುತ್ತಿಲ್ಲ,ಹೊಸ ಬೆಳೆ ನಾಟಿ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ, ಇಂತಹ ಸಂದರ್ಭದಲ್ಲಿ ಸತತವಾಗಿ ತಮಿಳುನಾಡಿಗೆ ನೀರು ಹರಿಸಿ ಜಲಾಶಯಗಳನ್ನ ಬರಿದು ಮಾಡಿದೆ ಎಂದು ದೂರಿದರು.
ಕನ್ನಡಪರ ಸಂಘಟನೆಗಳ ಮುಖಂಡರಾದ ಲೋಕೇಶ್ ಗೌಡ, ಪ್ರಕಾಶ್ ಗೌಡ, ನೀಲೇಶ್ ಗೌಡ, ರಮೇಶ್, ಕೃಷ್ಣೇಗೌಡ, ಎಂ ಬಿ ನಾಗಣ್ಣಗೌಡ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದರು.