ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಡಾ. ಸಿದ್ದರಾಮಯ್ಯ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ಮುಖಂಡರು, ಕಾರ್ಯಕರ್ತರು ಬಿಜೆಪಿ ವರಿಷ್ಠರನ್ನು ಆಗ್ರಹಿಸಿದ್ದಾರೆ.
ಮಂಡ್ಯನಗರದ ತಾವರೆಗೆರೆಯ ಕೃಷ್ಣ ರೈಸ್ಮಿಲ್ ಆವರಣದಲ್ಲಿ ಡಾ.ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಸಭೆ ನಡೆಸುವ ಮೂಲಕ ಜಾ.ದಳ-ಬಿಜೆಪಿ ಮೈತ್ರಿಯಾದರೂ ಬಿಜೆಪಿ ವತಿಯಿಂದಲೇ ಡಾ. ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ನಿರ್ಣಯ ಕೈಗೊಂಡರು.
2019ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ದೊರೆಯುವ ನಿರೀಕ್ಷೆಯಿತು. ಆದರೆ, ಆ ಸಂದರ್ಭದಲ್ಲಿ ರಾಜಕೀಯ ಕಾರಣಗಳಿಂದಾಗಿ ಬಿಜೆಪಿ ಪಕ್ಷವು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಿಸಿತ್ತು. ಇದರಿಂದ ಆಗ ಅವಕಾಶ ತಪ್ಪಿದ ಹಿನ್ನೆಲೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಾದರೂ ಡಾ.ಸಿದ್ದರಾಮಯ್ಯ ಅವರಿಗೆ ಪಕ್ಷವು ಟಿಕೆಟ್ ನೀಡಬೇಕೆಂಬುದು ಒತ್ತಾಯಿಸಿದರು.
ಬಿಜೆಪಿ ಹಿರಿಯ ನಾಯಕ ಚಂದಗಾಲು ಶಿವಣ್ಣ ಮಾತನಾಡಿ, ಲೋಕಸಬಾ ಚುನಾವಣೆ ಸಮೀಪಿಸುತ್ತಿದೆ. ಇಡೀ ದೇಶದಲ್ಲಿ ಬಿಜೆಪಿ ಪರ ಅಲೆ ಇದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಕೂಡ ಬಿಜೆಪಿ ಅಭ್ಯರ್ಥಿಗೆ ಪೂರಕವಾಗಿದೆ. ಜಿಲ್ಲೆಯಲ್ಲಿ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಗಳಿದ್ದು, ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಬಿಜೆಪಿ ಮುಖಂಡ ಅಶೋಕ್ ಜಯರಾಂ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವು ಸದೃಢವಾಗಿದೆ. ಜಾ.ದಳ-ಬಿಜೆಪಿ ಮೈತ್ರಿಯಾದರೆ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು. ಡಾ. ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ಮುಖಂಡ ಇಂಡುವಾಳು ಸಚ್ಚಿದಾನಂದ ಮಾತನಾಡಿ, ಡಾ.ಸಿದ್ದರಾಮಯ್ಯ ಅವರು ತ್ಯಾಗಿ. ಎಲ್ಲ ಪಕ್ಷದಲ್ಲೂ ಅವರಿಗೆ ಸ್ನೇಹಿತರಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಒಪ್ಪಿ ಬಿಜೆಪಿ ಸೇರಿದರು. 6 ತಿಂಗಳ ಅವಧಿಗೆ ನಡೆದ ಲೋಕಸಭೇ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ಪರವಾಗಿ ಅತಿ ಹೆಚ್ಚು ಮತಗಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. 2019ರ ಚುನಾವಣೆಯಲ್ಲಿ ಕರ್ಣನ ರೀತಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಅವರಿಗೆ ತನ್ನ ಸ್ಥಾನ ತ್ಯಾಗ ಮಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರವನ್ನು ನನಗಾಗಿ ಬಿಟ್ಟುಕೊಟ್ಟರು. ಈ ಬಾರಿ ಅವರ ಕೈ ಬಲಪಡಿಸಬೇಕು ಎಂದರು.
ಸಭೆಯಲ್ಲಿ ಮುಖಂಡರಾದ ವಿದ್ಯಾನಾಗೇಂದ್ರ, ಯಮದೂರು ಸಿದ್ದರಾಜು, ಎಚ್.ಪಿ. ಮಹೇಶ್, ಮನ್ಮುಲ್ ನಿರ್ದೇಶಕಿ ರೂಪಾ, ಶೀಳನೆರೆ ಅಂಬರೀಶ್, ವಸಂತ್ ಕುಮಾರ್, ಪ.ನಾ. ಸುರೇಶ್ ಭಾಗವಹಿಸಿದ್ದರು.