ಕಳೆದ ಐದು ವರ್ಷಗಳ ಹಾಲಿ ಶಾಸಕರ ಅವಧಿಗೂ ಹಾಗೂ ನಾನು ಅಧಿಕಾರದಲ್ಲಿದ್ದ ಅವಧಿಗೂ ಏನು ವ್ಯತ್ಯಾಸ ಎಂಬುದನ್ನು ನೀವೇ ತೀರ್ಮಾನ ಮಾಡಿ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು
ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಬ್ರಹ್ಮದೇವರಹಳ್ಳಿ ಗ್ರಾಮ ಪಂಚಾಯತಿ ಆವರಣದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಐದು ವರ್ಷಗಳಲ್ಲಿ ಕುಮಾರಸ್ವಾಮಿ ಆಗಲಿ, ತಾಲೂಕಿನ ಶಾಸಕರೇ ಆಗಲಿ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಕೆಲಸವನ್ನು ಸಹ ಮಾಡಿಲ್ಲ.ಎರಡೂ ಅವಧಿಯಲ್ಲಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಂಡು,ಮುಂಬರುವ ಚುನಾವಣೆಯಲ್ಲಿ ನನಗೊಂದು ಅವಕಾಶ ನೀಡಿದರೆ,ಕ್ಷೇತ್ರದಲ್ಲಿ ಮತ್ತೆ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದರು.
ನಾನು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬ್ರಹ್ಮದೇವರಹಳ್ಳಿಯಲ್ಲಿ ಆರೋಗ್ಯ ಕೇಂದ್ರ, ರಂಗಮಂಟಪ, ಮೈಸೂರು-ಬೀದರ್ ರಸ್ತೆ ಅಭಿವೃದ್ಧಿ, ಗುಡ್ಡೇನಹಳ್ಳಿ ಕ್ರಾಸ್ ನಲ್ಲಿ ರೈತರ ಅನುಕೂಲಕ್ಕಾಗಿ ವಿದ್ಯುತ್ ಘಟಕ ಸ್ಥಾಪನೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಕಳೆದ ಚುನಾವಣೆಯಲ್ಲಿ 47,000 ಮತಗಳ ಅಂತರದಿಂದ ಸೋಲಿಸಿದ್ದೀರಿ. ಮುಂದಿನ ಚುನಾವಣೆಯಲ್ಲಿ ನನಗೆ ಹೆಚ್ಚಿನ ಮತಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಆರ್. ರಾಜೇಶ್, ಯುವ ಮುಖಂಡರಾದ ಸುನಿಲ್ ಲಕ್ಷ್ಮಿಕಾಂತ್, ಮಾಜಿ ಅಧ್ಯಕ್ಷ ಹನುಮಂತು,ತಾ. ಪಂ. ಅಧ್ಯಕ್ಷ ಮಾಜಿ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಸಂತ ಮಣಿ, ಗೀತಾ ದಾಸೇಗೌಡ, ಎಪಿಸಿಎಂಎಸ್ ನಿರ್ದೇಶಕ ಸಾಮಕಳ್ಳಿ ಚೇತನ್ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.