ಧರ್ಮಸ್ಥಳ ಕ್ಷೇತ್ರಕ್ಕೆ ಎಂಟುನೂರು ವರ್ಷಗಳ ಇತಿಹಾಸವಿದ್ದು, ಶ್ರೀಗಳು ಸುಮಾರು ಮೂವತ್ತು ವರ್ಷಗಳಿಂದಲೂ ಉತ್ತಮ ಯೋಜನೆಗಳನ್ನು ಜನರಿಗೆ ನೀಡುವ ಮೂಲಕ ಅನುಕೂಲ ಕಲ್ಪಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಮೈಸೂರು ಪ್ರಾದೇಶಿಕ ವಿಭಾಗದ ಜಯರಾಂ ನೆಲ್ಲಿತ್ತಾಯ ತಿಳಿಸಿದರು.
ಮಂಡ್ಯ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ನಿಂದ ಆಯೋಜಿಸಿದ್ದ ಒಕ್ಕೂಟ ಪದಗ್ರಹಣ ಸಮಾರಂಭ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯಲ್ಲಿ 22 ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. 45 ಲಕ್ಷ ಸದಸ್ಯರು ಇದ್ದಾರೆ. 19 ಸಾವಿರ ಕೋಟಿ ಸಾಲ ಕೊಟ್ಟು ನೆರವಾಗಿದೆ. ರೈತರ ಪರವಾಗಿ ಶ್ರೀಕ್ಷೇತ್ರವು ಯೋಜನೆಗಳನ್ನು ರೂಪಿಸಿ ನೆರವಾಗಿದೆ. ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ನಡೆದುಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬೊರೇಗೌಡ ಮಾತನಾಡಿ, ಸರ್ಕಾರದ ನಿಯಮಗಳನ್ನು ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಡಾ.ವೀರೇಂದ್ರಹೆಗ್ಗಡೆ ಅವರು ಬಡವರ ಪರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ, ಶ್ರೀಕ್ಷೇತ್ರದ ಟ್ರಸ್ಟ್ನಲ್ಲಿ ಸಾವಿರಾರು ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಶಿಸ್ತು ಸಂಯಕ್ಕೆ ನಮ್ಮ ಶ್ರೀಕ್ಷೇತ್ರ ಮೆಚ್ಚುವಂತಾಗಿದೆ ಎಂದರು.
ಒಕ್ಕೂಟದಿಂದ ಸಂಘವು ಅಭಿವೃದ್ಧಿ ಆಗುತ್ತದೆ. ಬಡಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತವೆ. ಸಾಲದ ಒಟ್ಟಿಗೆ ಆರೋಗ್ಯ ರಕ್ಷಾ ವಿಮೆ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮದ್ಯಪಾನ ಮುಕ್ತ ಕಾರ್ಯ ಸೇರಿದಂತೆ ಹತ್ತಾರು ಜನಪರ ಕಾರ್ಯಕ್ರಮ ಮಾಡಿ ಜನಮನ್ನಣೆ ಗಳಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭ ನಡೆಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ, ಜಿಲ್ಲಾ ನಿರ್ದೇಶಕಿ ಚೇತನಾ, ದೊಡ್ಡಗರುಡನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಆರತಿ ಮೋಹನ್, ಮುಖಂಡರಾದ ಚಂದ್ರು, ಬೋರಲಿಂಗೇಗೌಡ, ನಾಗರಾಜು, ಕರೀಗೌಡ, ಚಂದ್ರಣ್ಣ, ದೊಳ್ಳೇಗೌಡ, ಆನಂದ್, ಭೈರೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.