ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ನಲ್ಲಿ ಕಾವೇರಿ ಪ್ರತಿಮೆ ಮತ್ತು ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ತಿಳಿಸಿದರು.
ವಿಧಾನಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ.ಮಾದೇಗೌಡ ಅವರು, ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ಕೆ.ಆರ್.ಎಸ್. ಜಲಾಶಯ ಮತ್ತು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಈ ಯೋಜನೆಯ ಅಂದಾಜು ಮೊತ್ತ ರೂ. 1425 ಕೋಟಿಗಳಾಗಿದ್ದು, ಅನುಷ್ಠಾನಕ್ಕೆ 198 ಎಕರೆ ಭೂಮಿ ಅವಶ್ಯಕತೆ ಇದೆ. ಸದರಿ ಭೂಮಿಯು ಸರ್ಕಾರಿ ಸ್ವಾಮ್ಯದ್ದಾಗಿರುತ್ತದೆ. ಖಾಸಗಿಯಾಗಿ ಭೂಮಿಯನ್ನು ಪಡೆಯುವ ಉದ್ದೇಶವಿಲ್ಲ. ಯೋಜನೆಯ ಅನುಷ್ಠಾನದಿಂದ ಪ್ರವಾಸೋದ್ಯಕ್ಕೆ ಉತ್ತೇಜನ ಸಿಗಲಿದ್ದು, ನೇರ ಮತ್ತು ಪರೋಕ್ಷವಾಗಿ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ ಎಂದು ತಿಳಿಸಿದರು.
ಶಾಸಕ ಮಧು ಜಿ.ಮಾದೇಗೌಡ ಮಾತನಾಡಿ, ಲಕ್ಷಾಂತರ ಜನರ ಬದುಕಿಗೆ ಆಧಾರವಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಯಾವುದೇ ಧಕ್ಕೆ ಆಗದಂತೆ ಹಾಗೂ ರೈತರ ಹಿತವನ್ನೂ ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಅನುಷ್ಠಾನಿಸಬೇಕು ಎಂದು ಹೇಳಿದರು.
ಪ್ರಸ್ತುತ ಯೋಜನಾ ವರದಿಯು ಅನುಮೋದನಾ ಪ್ರಕ್ರಿಯೆಯಲ್ಲಿದ್ದು, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿದೆ. ಪಿಪಿಪಿ ಯೋಜನೆಯು ಪ್ರಾಜೆಕ್ಟ್ ಅಪ್ರೈಸಲ್ ಸಮಿತಿ ಸಭೆಯಲ್ಲಿ Rapid Environmental Impact Assessment Study ಸಲ್ಲಿಸಲು ಹಾಗೂ ಕೆಲವು ಸಲಹೆಗಳನ್ನು ನೀಡಿ ಮಾಪಾರ್ಡಿತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿರುತ್ತಾರೆ. ಅದರಂತೆ ಅನುಪಾಲನಾ ಕ್ರಮವಹಿಸಲಾಗಿರುತ್ತದೆ ಎಂದು ವಿವರಿಸಿದರು.
ಬೇರೆಡೆ ಇಲ್ಲ
ಕೆ.ಆರ್.ಎಸ್. ಹೊರತುಪಡಿಸಿ ಬೇರೆಡೆ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಾಣ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.