ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸುವ ದಿಸೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಇಂದಿನಿಂದ ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್ ತಿಳಿಸಿದರು.
ಮಂಡ್ಯ ನಗರದ ಲಕ್ಷ್ಮಿಜನಾರ್ದನ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಸಾಯಿ ಶ್ಯೂರ್ ರಾಗಿ ಮಾಲ್ಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, 1ರಿಂದ 10ನೇ ತರಗತಿಯ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಟಿಕತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ವಾರಕ್ಕೆ ಮೂರು ದಿನ ಕ್ಷೀರ ಭಾಗ್ಯ ಯೋಜನೆ ಯೊಂದಿಗೆ ರಾಗಿಮಾಲ್ಟ್ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶಿವರಾಮೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ ಹೆಚ್ಚಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಅತ್ಯುತ್ತಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮವನ್ನು ಅನು ಪಾಲನೆ ಮಾಡುವ ಮೂಲಕ ಯಶಸ್ವಿಗೊಳಿಸಲು ಕೋರಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಪಿ.ಎಂ.ಪೋಷಣ್ ಜಿಲ್ಲಾ ಶಿಕ್ಷಾಣಾಧಿಕಾರಿ ಟಿ.ಆರ್. ಲತಾ, ಸಹಾಯಕ ನಿರ್ದೇಶಕ ಗಿರೀಶ್, ಲಕ್ಷ್ಮಿ ಜನಾರ್ಧನ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಅಂಜನಾ ಶ್ರೀಕಾಂತ್, ನಿರ್ದೇಶಕ ಅಶೋಕ್, ಮುಖ್ಯ ಶಿಕ್ಷಕಿ ಧನಲಕ್ಷ್ಮಿ, ಶಿಕ್ಷಣ ಸಂಯೋಜಕ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.