ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ನಡೆಸುತ್ತಿರುವ ಹೋರಾಟವನ್ನು ಕೈ ಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಾಡಿದ ಮನವಿಯನ್ನು ತಿರಸ್ಕರಿಸಿರುವ ಮಂಡ್ಯ ಜಿಲ್ಲಾ ರೈತ ರಕ್ಷಣಾ ಸಮಿತಿ ಸೆಪ್ಟೆಂಬರ್ 21ರವರೆಗೂ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದೆ.
ಮಂಡ್ಯನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವನದ ಎದುರು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ 15ನೇ ದಿನವು ಹೋರಾಟ ಮುಂದುವರೆಸಿದ್ದು, ಸಚಿವ ಚಲುವರಾಯಸ್ವಾಮಿ ಧರಣಿ ಸ್ಥಳಕ್ಕೆ ಭೇಟಿಯಾಗಿ ಹೋರಾಟ ಕೈಬಿಡುವಂತೆ ಮನವಿ ಮಾಡಿದರು.
ಸಮಿತಿಯ ಮುಖಂಡರಾದ ಸುನಂದಾ ಜಯರಾಂ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವಂತೆ ತಮಿಳುನಾಡಿಗೆ ನೀರು ಬಿಡಲ್ಲ, ಆದರೆ ನೀರಾವರಿ ತಜ್ಞರ ಮತ್ತು ಕಾನೂನು ತಜ್ಞರ ಸಲಹೆ ಪಡೆದು ತೀರ್ಮಾನ ಮಾಡುವುದಾಗಿ ಗೊಂದಲದ ಹೇಳಿಕೆ ನೀಡಿದ್ದಾರೆ, ಆದ್ದರಿಂದ ನಾವು ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಧರಣಿ ಮುಂದುರಿಸುತ್ತೇವೆ ಎಂದರು.
ರಾಜ್ಯ ಸರ್ಕಾರ ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿಲ್ಲ, ಧರಣಿಯನ್ನು ವಾಪಸ್ ಪಡೆಯಿರಿ, ಸರ್ಕಾರವು ರೈತರ ಹಿತ ಕಾಪಾಡಲು ಮುಂದಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು, ಆದರೆ ಇದಕ್ಕೆ ಹೋರಾಟಗಾರರು ಸೊಪ್ಪು ಹಾಕಲಿಲ್ಲ.
ಈ ಸಂದರ್ಭದಲ್ಲಿ ಶಾಸಕ ರವಿಕುಮಾರ್, ರೈತಸಂಘದ ಇಂಡವಾಳು ಚಂದ್ರಶೇಖರ್, ಮುದ್ದೇಗೌಡ ಮತ್ತಿತರರಿದ್ದರು.