ಮಂಡ್ಯ ಜಿಲ್ಲೆಯಾದ್ಯಂತ ಹಲವಡೆ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ದೇವರಿಗೆ ಬಗೆಬಗೆಯ ಹೂಗಳಿಂದ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.
ಮಂಡ್ಯ ನಗರದ ಗುತ್ತಲು ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಅರ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅರಕೇಶ್ವರ ಸ್ವಾಮಿಗೆ ವಿವಿಧ ಬಗೆಯ ಹೂಗಳಿಂದ ಪುಷ್ಪಾಲಂಕಾರ ಮಾಡಲಾಗಿತ್ತು. ಭಕ್ತರು ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ, ಅರ್ಕೇಶ್ವರ ಸ್ವಾಮಿಯ ದರ್ಶನ ಪಡೆದರು. ಕಡೆ ಕಾರ್ತಿಕ ಸೋಮವಾರದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ನಗರದ ಶಂಕರ ನಗರದ ಪಂಪ್ ಹೌಸ್ ಬಳಿ ಇರುವ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪುನೀತರಾದರು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.
ನಗರದ ಕಲ್ಲಹಳ್ಳಿಯಲ್ಲಿ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಮಂಚಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಭಕ್ತರು ಬಂದು ದೇವರ ದರ್ಶನ ಸ್ವೀಕರಿಸಿ ಪ್ರಸಾದ ಸ್ವೀಕರಿಸಿದರು.
ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಶ್ರೀ ತಾಂಡೇಶ್ವರ ಸ್ವಾಮಿ, ಪಾರ್ವತಿ ದೇವಿ, ದೊಡ್ಡಯ್ಯ ಸ್ವಾಮಿ, ಲಕ್ಷ್ಮಿ ವೆಂಕಟೇಶ್ವರ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಇಲ್ಲೂ ಕೂಡ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಮಂಡ್ಯ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿವಿಧ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಅನ್ನ ಸಂತರ್ಪಣೆ ಮಾಡಲಾಯಿತು.