ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ನಿಷ್ಠ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪದವಿ ನೀಡಬೇಕೆಂದು ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ಒತ್ತಾಯಿಸಿದರು.
ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಜನಾಂಗದ ಹಿರಿಯರು, ಕನ್ನಡ ನಾಡಿನ ನಿರ್ಮಾಣದಲ್ಲಿ ತಮ್ಮ ಕೊಡುಗೆ ನೀಡಿದ್ದಾರೆ. ವಿಶ್ವದಲ್ಲೇ ಶ್ರೇಷ್ಠ ನಗರವೆಂಬ ಖ್ಯಾತಿಗೆ ಪಾತ್ರವಾಗಿರುವ ಬೆಂಗಳೂರು ನಿರ್ಮಾಣ, ಐತಿಹಾಸಿಕ ವಿಧಾನಸೌಧ, ಸುಂದರ ವಿಕಾಸಸೌಧ ಹಾಗೂ ಬೆಳಗಾವಿಯ ಸುವರ್ಣ ವಿಧಾನಸೌಧ ನಿರ್ಮಾಣದಲ್ಲಿ ಒಕ್ಕಲಿಗ ಜನಾಂಗದ ಮುಖ್ಯಮಂತ್ರಿಗಳು ಶ್ರಮಿಸಿದ್ದು, ಅದೇ ರೀತಿ ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪದವಿ ನೀಡಬೇಕೆಂದು ಅವರು ಒತ್ತಾಯಿಸಿದರು.
ಈ ಹಿಂದೆ ಹಲವಾರು ಬಾರಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ಮತ್ತು ಕೀರ್ತಿ ತಂದುಕೊಟ್ಟ ಅನುಭವುಳ್ಳವರಾಗಿರುತ್ತಾರೆ. ಇಡೀ ರಾಜ್ಯದ ಜನತೆ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡಲು ಆಶಾ ಮನೋಭಾವನೆ ಹೊಂದಿರುತ್ತಾರೆ ಎಂದು ಹೇಳಿದರು.
ರಾಜ್ಯದ ಒಕ್ಕಲಿಗರ ಪ್ರಭಾವಿ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಮಂಡ್ಯ ಮತ್ತು ಜಿಲ್ಲೆಯ ಎಲ್ಲಾ ಜನಾಂಗದ ಪರವಾಗಿ ಈ ಬಾರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಯೋಗೇಶ್, ಕೆಂಪರಾಜು, ಯೋಗಣ್ಣ, ನಿಂಗರಾಜು, ಅಜಯ್ಕುಮಾರ್ ಗೋಷ್ಠಿಯಲ್ಲಿದ್ದರು.