ಬದಲಾಗುತ್ತಿರುವ ಸ್ಪರ್ಧಾತ್ಮಕ ಜಗತ್ತಿಗೆ ಇಂದಿನ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೊಡ್ಡ ಜವಾಬ್ದಾರಿ ಕಾಲೇಜುಗಳ ಮೇಲಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಡಾ.ಅಮೃತೇಶ್ ಕೆ.ಎನ್ ಹೇಳಿದರು.
ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನ ಐಕ್ಯೂಎಸಿ ಮತ್ತು ರೂಸಾ ವಿಭಾಗಗಳ ವತಿಯಿಂದ ಅಧ್ಯಾಪಕರಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಂಡು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಮಾರ್ಗದರ್ಶನ ಮಾಡುವ ಹೊಣೆಗಾರಿಕೆ ಪ್ರಾಂಶುಪಾಲರು ಮತ್ತು ಆಧ್ಯಾಪಕರು ಸೇರಿದಂತೆ ಕಾಲೇಜಿನ ಎಲ್ಲಾ ಸಿಬ್ಬಂದಿಗಳದಾಗಿದೆ. ಸಂಸ್ಥೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾಡಿದ ಪ್ರತಿ ಕೆಲಸವನ್ನು ದಾಖಲೀಕರಣ ಪ್ರಕ್ರಿಯೆಗೆ ಒಳಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೊದಲ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಡಾ.ಲೋಹಿತ್, ಪ್ರತಿ ಕಾಲೇಜುಗಳು ಕೂಡ ಉತ್ತಮ ಅಭ್ಯಾಸಗಳನ್ನು ಪಾಲಿಸಿ ಅವುಗಳ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಲು ಕರೆ ನೀಡಿದರು.
ನಂಜನಗೂಡು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಕೆ ಕೆಂಪೇಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಬೋದನೆಯ ಜೊತೆಗೆ ಸಮಕಾಲೀನ ಉದ್ಯೋಗ ಜಗತ್ತು ನಿರೀಕ್ಷಿಸುವ ಕೌಶಲಗಳನ್ನು ಮತ್ತು ಮೌಲ್ಯವರ್ಧಿತ ಕೋರ್ಸುಗಳನ್ನು ನಡೆಸುವುದು ಉತ್ತಮ ಎಂಬ ಅಭಿಪ್ರಾಯ ಮಂಡಿಸಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಹೇಮಲತಾ ಮಾತನಾಡಿ, ತಮ್ಮ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಸರ್ವಾಂಗೀಣ ರೀತಿಯಲ್ಲಿ ಬೋಧನಾ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಹೇಳಿದ್ದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ವಿಭಾಗದ ಸಂಚಾಲಕ ಡಾ.ಜಯಲಕ್ಷ್ಮಿ ಬಿ , ರೂಸಾ ಸಂಚಾಲಕರಾದ ಡಾ.ಪ್ರಮಿಳಾ ಎಂ.ಬಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿ ಭಾಗವಹಿಸಿದ್ದರು.