ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ 2023ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ‘ಒರೆಗಲ್ಲು’ ಕೃತಿ ಬಿಡುಗಡೆ ಕಾರ್ಯಕ್ರಮವು ಜೂ.9ರಂದು ಮಂಡ್ಯ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಎಚ್.ಆರ್. ಸುಜಾತ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023 ನೇ ಸಾಲಿನ ಪ್ರಶಸ್ತಿಗೆ ಯುವ ಕಥೆಗಾರ ಸ್ವಾಮಿ ಹೊನ್ನಾಚಿ ಅವರ ‘ದಾರಿ ತಪ್ಪಿಸುವ ಗಿಡ’ ಕೃತಿ ಆಯ್ಕೆಯನ್ನು ಮಾಡಲಾಗಿದೆ. ಈ ಸಾಲಿನಲ್ಲಿ ಒಟ್ಟು 33 ಕಥಾ ಸಂಕಲನಗಳು ಆಯ್ಕೆ ಸಮಿತಿಯ ಮುಂದೆ ಬಂದಿದ್ದು, ಮೂರು ಸುತ್ತುಗಳ ಪರಿಶೀಲನೆಯ ನಂತರ ಅಂತಿಮವಾಗಿ ಸ್ವಾಮಿ ಪೊನ್ನಾಚಿ ಅವರ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಅಂದಿನ ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಪ್ರೊ.ಕಾಳೇಗೌಡ ನಾಗವಾರ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿ ವಿಜೇತ ಕೃತಿ ಕುರಿತು ವಿಮರ್ಶಕಿ ಆರ್ ಸುನಂದಮ್ಮ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಪ್ರಶಸ್ತಿ ಪುರಸ್ಕೃತ ಕೃತಿಯ ಲೇಖಕ ಪೊನ್ನಾಚಿ ಸ್ವಾಮಿ, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಜೀವ ಸದಸ್ಯರಾದ ಡಿ.ಪಿ ರಾಜಮ್ಮ ರಾಮಣ್ಣ ಭಾಗವಹಿಸುವರು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಖ್ಯಾತ ಗಾಯಕಿ ಎಂ.ಡಿ. ಪಲ್ಲವಿ ಮತ್ತು ಸಂಗಡಿಗರಿಂದ ಭಾವ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು .
ಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ರಾಜೇಂದ್ರ ಪ್ರಸಾದ್, ರಾಕೇಶ್ ಉಪಸ್ಥಿತರಿದ್ದರು.