ಮಂಡ್ಯ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಜಯಂತಿ ಆಚರಣೆಗೆ ಮಾಡಲು ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು.
ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಡಾ. ಬಾಬು ಜಗಜೀವನ್ ರಾಂ (ಬಾಬೂಜಿ) ಹಾಗೂ ಡಾ: ಬಿ.ಆರ್.ಅಂಬೇಡ್ಕರ್ ಅವರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರುಗಳ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಇಬ್ಬರೂ ಮಹನೀಯರು ನೀಡಿರುವ ತತ್ವ ಹಾಗೂ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪ. ಅವರ ಚಿಂತನೆಗಳನ್ನು ಎಲ್ಲರಿಗೂ ತಿಳಿಸಬೇಕು ಎಂದರು.
ಏಪ್ರಿಲ್ 5 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಪಾಕ್೯ನಲ್ಲಿರುವ ಬಾಬೂ ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಸಲಾಗುವುದು ಎಂದರು.
ಏಪ್ರಿಲ್ 14 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಪಾಕ್೯ನಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅದೇ ಸ್ಥಳದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಉಪನ್ಯಾಸ ನೀಡಲಿದ್ದಾರೆ.
ಹಾಜರಾತಿ ಕಡ್ಡಾಯ
ಈ ಎರಡು ಜಯಂತಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಚುನಾವಣಾ ಕೆಲಸಕ್ಕೆ ಮಾತ್ರ ವಿನಾಯಿತಿ ಇರುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್ ಯತೀಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.