ಮಂಡ್ಯ ಜಿಲ್ಲಾ ಪಂಚಾಯತ್ ಲಿಂಕ್ ಡಕ್ಯೂಮೆಂಟ್ ಅಡಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿಗದಿತ ಅವದಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಲಿಂಕ್ ಡಕ್ಯೂಮೆಂಟ್ ನಲ್ಲಿ 250 ಕಾಮಗಾರಿಗಳು ಆಡಳಿತಾತ್ಮಕ ಮಂಜೂರಾತಿ ಆಗಿದೆ. ಕರಾರು ಮಾಡಿಕೊಂಡಿರುವ ಕೆಲವು ಕಾಮಗಾರಿಗಳು ಪ್ರಾರಂಭವಾಗಿರುವುದಿಲ್ಲ. ಇದರ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಇಂಜಿನಿಯರಿಂಗ್ ಇಲಾಖೆಯೊಂದಿಗೆ ಸಮನ್ವಯ ವಹಿಸಿ ಕೆಲಸಗಳು ಪ್ರಾರಂಭವಾಗುವಂತೆ ನೋಡಿಕೊಳ್ಳಬೇಕು. ಕೆಲಸಗಳು ಪ್ರಾರಂಭವಾಗದಿದ್ದರೆ ಇಲಾಖೆಗಳಿಗೆ ತೊಂದರೆಯಾಗುತ್ತದೆ ಎಂಬುದನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು ಎಂದರು.
ಕಾಮಗಾರಿಗಳನ್ನು ನಿಗದಿತ ಅವದಿಯೊಳಗೆ ಪ್ರಾರಂಭಿಸಿ ಆರ್ಥಿಕ ವರ್ಷದಲ್ಲೇ ಅನುದಾನ ವೆಚ್ಚ ಮಾಡುವುದು. ಅನುದಾನ ವೆಚ್ಚವಾಗದೇ ಉಳಿದಲ್ಲಿ ಮುಂದಿನ ಸಾಲಿಗೆ ಅದನ್ನು ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಉಳಿದಿರುವ ದಿನಗಳಲ್ಲಿ ಶೀಘ್ರಗತಿಯಲ್ಲಿ ಕಾರ್ಯನಿರ್ವಹಿಸಿ ಎಂದರು.
ವಿವಿಧ ಯೋಜನೆಗಳಡಿ ಸಾಮಾನ್ಯ ಸಭೆಯಲ್ಲಿ ಆಯ್ಕೆಯಾಗಬೇಕಿರುವ ಫಲಾನುಭವಿಗಳ ಪಟ್ಟಿಯನ್ನು ನಿಯಮಾನುಸಾರ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.