ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳನ್ನೂ ”ಬರಪೀಡಿತ ಪ್ರದೇಶ” ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಾ.ದಳದ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ನ.10ರಿಂದ ”ಬರ” ಅಧ್ಯಯನ ನಡೆಸಲಾಗುವುದು ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಯಾ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಜಿಪಂ, ತಾಪಂ ಮಾಜಿ ಅಧ್ಯಕ್ಷರು ಹಾಗೂ ನಾಯಕರ ನೇತೃತ್ವದಲ್ಲಿ ಬರ ಅಧ್ಯಯನ ನಡೆಯಲಿದ್ದು, ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಅಧ್ಯಯನ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.10ರ ಶುಕ್ರವಾರ ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮದ್ದೂರು ತಾಲ್ಲೂಕಿನ ಕೆಸ್ತೂರು ಮಾರ್ಗವಾಗಿ ಹೂತಗೆರೆ, ಅಂಕನಾಥಪುರ, ಹರಕನಹಳ್ಳಿ, ಮಲ್ಲನಾಯಕನಹಳ್ಳಿ, ಮಲ್ಲನಕುಪ್ಪೆ, ಕೆ.ಹೊನ್ನಲಗೆರೆ, ಎಸ್.ಐ. ಹಾಗಲಹಳ್ಳಿ ಗ್ರಾಮಗಳಲ್ಲಿ ಅಧ್ಯಯನ ನಡೆಸಲಾಗುವುದು. ಬಳಿಕ ಮಧ್ಯಾಹ್ಯ 2 ಗಂಟೆಗೆ ಮಳವಳ್ಳಿ ತಾಲ್ಲೂಕಿನಲ್ಲಿ ಅಧ್ಯಯನ ನಡೆಸಲಾಗುವುದು.
ಬರ ಅಧ್ಯಯನ ನಡೆಸಿದ ಬಳಿಕ ಬೆಳೆ ನಷ್ಟವಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗುವುದು. ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಸುರೇಶ್ಗೌಡ, ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಜಿಪಂ, ತಾಪಂ ಮಾಜಿ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.