ಸಂವಿಧಾನದ ಆಶಯಗಳಿಗೆ ಪೂರಕವಾದ “ಪಂಚರತ್ನ ಯೋಜನೆ” ಜಾರಿಗಾಗಿ ಜೆಡಿಎಸ್ ಬೆಂಬಲಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.
ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಪಂಚರತ್ನ ಯೋಜನೆ” ಜಾರಿಗಾಗಿ ಜೆಡಿಎಸ್ ಬೆಂಬಲಿಸಿ” ಎಂಬ ಘೋಷಣೆಯೊಂದಿಗೆ ಈ ಬಾರಿ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಶಿರಾ ವಿಧಾನಸಭಾ ಕ್ಷೇತ್ರ ಹೊರತಾಗಿ ಉಳಿದೆಲ್ಲಾ ಕ್ಷೇತ್ರಗಳಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್)ದ ಅಭ್ಯರ್ಥಿಗಳನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಜನತಾದಳ ಜಾತ್ಯಾತೀತ (ಜೆಡಿಎಸ್) ನಾಯಕರು, ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಸಿ.ಎಸ್ .ಪುಟ್ಟರಾಜು ಅವರೊಡನೆ ಮಾತುಕತೆ ಮಾಡಲಾಗಿ, ರಾಜ್ಯ ವಿಧಾನ ಮಂಡಲ ಸೇರಿದಂತೆ ಜಿಲ್ಲಾ/ತಾಲ್ಲೂಕು ಪಂಚಾಯಿತಿಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸದಾಧಿಕಾರಿಗಳ ದನಿ ಇರುವಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದರು.
ಪ್ರಾದೇಶಿಕ ಸಮಸ್ಯೆಗಳಾದ ನೆಲ, ಜಲ, ಭಾಷೆ ಅಭಿವೃದ್ಧಿಗೆ ಪೂರಕವಾಗಿ ಕರ್ನಾಟಕ ಪ್ರದೇಶದ ರಾಜಕೀಯ ಶಕ್ತಿಯಾಗಿರುವ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಮುಖಂಡರಾದ ಎಸ್.ಕುಮಾರ್, ಬಿ.ಆನಂದ, ಮಹದೇವ, ಸೋಮಶೇಖರ್ ಮತ್ತು ಭಾಗ್ಯಮ್ಮ ಉಪಸ್ಥಿತರಿದ್ದರು.