ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಡಿ.ಬಿ ಚೌಡೇಶ್ ಅಧ್ಯಕ್ಷರಾಗಿ, ಇಂದ್ರಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರವಿ ಘೋಷಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾದ ಗುರುಪ್ರಸಾದ್, ಎಂ.ಬಿ.ರವಿ , ಡಿ.ಜೆ.ರಮೇಶ್, ಮಹದೇವಪ್ಪ, ಶಿವಮಾದಪ್ಪ , ಶಶಿಕಲಾ ಅವರನ್ನು ಅಭಿನಂದಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಇಂದು ದುದ್ದ ಹೋಬಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಶೇಕಡಾ 95 ರಷ್ಟು ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ತಮ್ಮ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿದ ಅವರು, ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐ ಟಿ ತನಿಖಾ ಸಂಸ್ಥೆಗೆ ನೀಡಿದೆ. ಸತ್ಯಾಸತ್ಯತೆ ಶೀಘ್ರದಲ್ಲೇ ಹೊರ ಬೀಳಲಿದೆ, ನಮ್ಮ ಪಕ್ಷ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಡಿಪಡಿಸುವುದಿಲ್ಲ, ಎಸ್ಐಟಿ ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತೇವೆ, ಪ್ರಜ್ವಲ್ ರೇವಣ್ಣ ವಿರುದ್ದ ಪಕ್ಷದ ಶಿಸ್ತಿನ ಕ್ರಮ ತೆಗೆದುಕೊಂಡಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರಧಾನಿ ಮೊಮ್ಮಗ ಆಗಿದ್ದರು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು , ಹೆಣ್ಣು ಮಕ್ಕಳ ವಿಡಿಯೋ ಹರಿ ಬಿಟ್ಟವರಿಗೂ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಡಿ.ಮಹೇಶ್, ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೇಯಸ್ ಗೌಡ , ಮಂಜಯ್ಯ, ಲೋಕೇಶ್, ಬಸವ ಲಿಂಗಪ್ಪ, ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.