ಭಾರತ್ ಜೋಡೋ ಪಾದಯಾತ್ರೆಯ ರೂವಾರಿಗಳು, ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಜಿಲ್ಲೆಯ ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 29 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬುವ ಸದ್ದುದ್ದೇಶದಿಂದ ಕಾಂಗ್ರೆಸ್ ಗೆಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಧ್ಯೇಯೋದ್ದೇಶದೊಂದಿಗೆ ಏ.11ರಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪಾದಯಾತ್ರೆ ಆರಂಭವಾಗಲಿದ್ದು, 15 ದಿನಗಳ ಕಾಲ ನಾಗಮಂಗಲ ಕ್ಷೇತ್ರದಲ್ಲಿ ಹಾಗೂ ಆನಂತರದ 14 ದಿನಗಳ ಕಾಲ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಸಾಗಲಿದ್ದು, ಪ್ರತಿದಿನ 20 ಕಿ.ಮಿ.ನಂತೆ ಒಟ್ಟು 580 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದು ವಿವರಿಸಿದರು.
ಪಾದಯಾತ್ರೆಯಲ್ಲಿ ಎದುರಾಗುವ ಜನಸಾಮಾನ್ಯರನ್ನು ಮುಖಾಮುಖಿಯಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿವೇದಿಸುವ ಉದ್ದೇಶದಿಂದ ಪಾದಯಾತ್ರೆ ಸಾಗಲಿದ್ದು, ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಜನತೆ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಹಕಾರಿ ಧುರೀಣ ಕೌಡ್ಲೆ ಚನ್ನಪ್ಪ, ಕಾಂಗ್ರೆಸ್ ಪಕ್ಷದ ಎಸ್ಸಿ,ಎಸ್ಟಿ ಘಟಕ ಅಧ್ಯಕ್ಷ ಸುರೇಶ್ ಕಂಠಿ, ಮುಖಂಡರಾದ ಕ್ರಾಂತಿಸಿಂಹ, ವೀಣಾ ಶಂಕರ್, ಹರ್ಷವರ್ಧನ, ಸುಧಾ ಉಪಸ್ಥಿತರಿದ್ದರು.