Friday, September 20, 2024

ಪ್ರಾಯೋಗಿಕ ಆವೃತ್ತಿ

ತಾರತಮ್ಯ ನಿವಾರಣೆಗೆ ಸಮಾನ ಶಿಕ್ಷಣ ಅತ್ಯವಶ್ಯಕ: ಪ್ರೊ. ಕೃಷ್ಣರಾಜ್

ಶಿಕ್ಷಣದಲ್ಲಿ ತಾರತಮ್ಯ ನಿವಾರಿಸಲು ರಾಷ್ಟ್ರದಲ್ಲಿ ಸಮಾನ ಶಿಕ್ಷಣ ವ್ಯವಸ್ಥೆ ಅತ್ಯವಶ್ಯಕವಾಗಿದ್ದು, ಕೇಂದ್ರ ಸರ್ಕಾರ ಜಾರಿ ಮಾಡಬೇಕಿದೆ ಎಂದು ಎಂದು ಪ್ರೊ. ಕೃಷ್ಣರಾಜ್ ಒತ್ತಾಯಿಸಿದರು.

ಮಳವಳ್ಳಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ವತಿಯಿಂದ ನಡೆದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಮಳವಳ್ಳಿ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿಚಾರ ಸಂಕಿರಣ ಹಾಗೂ ಐಎಎಸ್ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಮಕ್ಕಳು ಇಂದಿಗೂ ಬೊರ್ಡ್ನಲ್ಲಿ ಅಕ್ಷರ ಕಲಿತರೇ ಖಾಸಗಿ ಶಾಲೆಗಳಲ್ಲಿ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಸುತ್ತಿದ್ದಾರೆ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಗ್ರಾಮೀಣ ಮಕ್ಕಳು ಹರಸಾಹಸ ಪಡುವಂತಹ ಸನ್ನಿವೇಶ ಎದುರಾಗಿದ್ದು, ಏಕರೂಪ ಶಿಕ್ಷಣ ಜಾರಿಯಾದರೇ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗುವಂತಾಗುತ್ತದೆ ಎಂದು ಹೇಳಿದರು.

ದೇಶದಲ್ಲಿ ಅರ್ಥಿಕತೆ, ಶಿಕ್ಷಣ, ಅಸಮಾನತೆ ಇರುವುದರಿಂದ ಇಂದಿಗೂ ಕೂಡ ಭಾರತ ದೇಶ ಅಭಿವೃದ್ದಿಯಲ್ಲಿ ಮುಂದುವರೆಯುತ್ತಿರುವ ರಾಷ್ಟ್ರವಾಗಿದೆ, ದೇಶದ ಬಹುಪಾಲು ಸಂಪತ್ತು ಕೆಲವೇ ಜನರಲ್ಲಿ ಅಡಗಿರುವುದರಿಂದ ದೇಶ ಅಭಿವೃದ್ದಿಯಲ್ಲಿ ಕುಂಠಿತ ಕಂಡಿದೆ ಎಂದರು.

ಮೊಬೈಲ್ ಬಳಕೆಯಿಂದ ದೂರವಾಗಬೇಕು

ಯುಪಿಎಸ್‌ಸಿ ಸಾಧಕ ಬಿಎಸ್ ಚಂದನ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು, ಓದಿಗೆ ಅಡೆತಡೆಗಳು ಹೆಚ್ಚಾಗುತ್ತಿರುವುದರಿಂದ ಮೊಬೈಲ್ ಬಳಕೆಯಿಂದ ದೂರವಾಗಬೇಕು, ಹಿಂದೆ ಗುರು ಮುಂದೆ ಗುರಿ ಇದ್ದರೇ ಏನು ಬೇಕಾದರೂ ಸಾಧಿಸಬಹುದು, ಕೇವಲ ಅಂಕಗಳಿಸಿ ಉದ್ಯೋಗ ಪಡೆದು ನೆಮ್ಮದಿ ಜೀವನ ಸಾಗಿಸುವುದಕ್ಕೆ ಸೀಮಿತಗೊಳಿಸಬಾರದು, ದೇಶಕ್ಕೆ ತನ್ನದೇ ಆದ ಕೊಡುಗೆಯನ್ನು ಕೊಟ್ಟು ಸಾರ್ಥಕರಾಗಬೇಕೆಂದು ಸಲಹೆ ನೀಡಿದರು.

ಶಿಕ್ಷಣ ಅಸಮಾನತೆಯನ್ನು ಮೆಟ್ಟಿನಿಲ್ಲುವ ರೀತಿಯಲ್ಲಿ ಶಿಕ್ಷಣದಲ್ಲಿ ಸಾಧಕರಾಗಬೇಕು, ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು, ಎಲ್ಲಾ ವಿದ್ಯಾರ್ಥಿಗಳು ದೇಶದ ಭವಿಷ್ಯರಾಗಿತ್ತಾರೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜವಾಬ್ದಾರಿಯೂ ಹೆಚ್ಚಾಗಿರುತ್ತದೆ, ಶಿಕ್ಷಣ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರದೇ ಮನುಷ್ಯರಲ್ಲಿ ಪರಿಪೂರ್ಣತೆಯನ್ನು ರೂಪಿಸುವುದೇ ಶಿಕ್ಷಣವಾಗಬೇಕೆಂದು ಕಿವಿಮಾತು ಹೇಳಿದರು.

ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಬೇಕು

ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್ ಶಿವಣ್ಣ ಮಾತನಾಡಿ, ಕೂಲಿ ಮಾಡುವ ಮಗ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರೇ ಶ್ರೀಮಂತರ ಮಗ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಇದರಿಂದಾಗಿ ಶಿಕ್ಷಣದಲ್ಲಿ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ಬಡವ, ಶ್ರೀಮಂತರ ಮಕ್ಕಳಿಗೆ ಸಮಾನ ಶಿಕ್ಷಣ ಸಿಗಬೇಕು, ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಬೇಕು, ಎಲ್ಲಾ ವಿಷಯ ಪಠ್ಯ ಪುಸ್ತಕಗಳನ್ನು ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ನೀಡಬೇಕೆಂದು ಒತ್ತಾಯಿಸಿದರು.

ಗ್ರಾಮೀಣ ಯುವಕರಿಗೆ ಉದ್ಯೋಗ ಕಲ್ಪಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಬೃಹತ್ ಉದ್ಯೋಗಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ನಿರುದ್ಯೋಗಿ ಯುವಕರು ಸದ್ಬಳಕೆ ಮಾಡಿಕೊಳ್ಳಬೇಕು, ಲೋಹಿಯಾ ವಿಚಾರ ವೇದಿಕೆಯಿಂದ ನಿರಂತರವಾಗಿ ಉದ್ಯೋಗಮೇಳ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರೋಗ್ಯ ಕಿಟ್ ವಿತರಣೆ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಸಮಾ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ, ಅಂಬೇಡ್ಕರ್, ಲೋಹಿಯಾ, ಕುವೆಂಪು, ಕನಕದಾಸರು ಸೇರಿದಂತೆ ಮಹನೀಯರ ಜೀವನ ಚರಿತ್ರೆಯನ್ನು ತಿಳಿಸುವ ವಿನೂತನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಯುಪಿಎಸ್‌ಸಿ ಸಾಧಕ ಚಂದನ್ ಅವರನ್ನು ಅಭಿನಂದಿಸಲಾಯಿತು. ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಡಿವೈಎಸ್‌ಪಿ ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಚಂದ್ರಪಾಟೀಲ್, ಕುರುಬರ ಸಂಘದ ರಾಜ್ಯ ನಿರ್ದೇಶಕ ಪುಟ್ಟಬಸವಯ್ಯ, ಕ್ಷೇತ್ರ ಸಮಾನ್ವಯಾಧಿಕಾರಿ ಎಂ.ಕೆ ಶ್ರೀನಿವಾಸ್, ಚಿತ್ರ ಕಲೆ ನಿರ್ದೇಶಕ ಮಳವಳ್ಳಿ ಶ್ರೀನಿವಾಸ್, ಸಮಾಜ ಸೇವಕ ತಳಗವಾದಿ ಪ್ರಕಾಶ್ ಸೇರಿದಂತೆ ಇತರರು ಇದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!