ಮಾಜಿ ಸಚಿವ, ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸ್ವಇಚ್ಛೆಯಿಂದ ನಿರ್ಧಾರ
ನನಗೆ ಟಿಕೆಟ್ ಕೈ ತಪ್ಪುವ ಭೀತಿಯಿಂದ ನಾನು ನಿವೃತ್ತಿ ನಿರ್ಧಾರ ತೆಗೆದುಕೊಂಡಿಲ್ಲ, ಸ್ವಇಚ್ಛೆಯಿಂದ ನಾನು ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಕೆ.ಎಸ್.ಈಶ್ವರಪ್ಪ ಸ್ಪಷ್ಟ ಪಡಿಸಿದರು.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ತುಂಬುವ ಸಲುವಾಗಿ ಹಾಗೂ ಬಿಜೆಪಿಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ತರುವ ಗುರಿಯಿಂದ ಈ ನಿರ್ಧಾರ ಮಾಡಿದ್ದೇನೆ ಎಂದರು.
ನನಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. 40 ವರ್ಷಗಳ ಕಾಲ ವಿವಿಧ ಸ್ಥಾನಮಾನ ನೀಡಿದೆ. ಮುಂದಿನ ಬಾರಿಯೂ ಈ ದೇಶಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಲು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಈ ದಿಢೀರ್ ಬೆಳವಣಿಗೆಯಿಂದ ಬಿಜೆಪಿ ಪಕ್ಷದಲ್ಲಿ ಈಶ್ವರಪ್ಪ ಅವರಂತೆ ಇನ್ನೂ ವಯಸ್ಸಾದ ಇನ್ನೂ ಹಲವು ಹಿರಿಯರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಭೀತಿ ಶುರುವಾಗಿದೆ.