ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತೋವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ವೈರಲ್ ಆಗಿರುವ ವಿಡಿಯೋ ನಿಜಕ್ಕೂ ಮಂಡ್ಯದ್ದೇ ಅಲ್ಲ. ಅಂತಹ ಘಟನೆ ಮಂಡ್ಯದಲ್ಲಿ ನಡೆದೇ ಇಲ್ಲ. ಆದರೆ ಬೇರೆಲ್ಲೋ ನಡೆದ ಅಪಘಾತದ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ.
ಈ ಕುರಿತು ಭಾನುವಾರ ಬೆಳಿಗ್ಗೆ 11 ಗಂಟೆಯಲ್ಲಿ ಸ್ಪಷ್ಟೀಕರಣ ನೀಡಿರುವ ಕೆಎಸ್’ಆರ್’ಟಿಸಿ ಮಂಡ್ಯ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ನಾಗರಾಜು, ಅವರು ಬಸ್ ಹತ್ತುವಾಗ ನಡೆದ ಘಟನೆ ಇದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಗಾದರೆ ಆ ಘಟನೆ ಎಲ್ಲಿ ನಡೆದಿದ್ದು ?
ಕಳೆದ ಜೂ.18 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಕಾರ್ಯಾಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಾಗುಡಿಲು ಗ್ರಾಮದ ಶಾಂತ ಕುಮಾರಿ (33) ಅವರ ಬಲಗೈ ತುಂಡಾಗಿದೆ ಹಾಗು ಹಾಗೂ ನಂಜನಗೂಡು ಹುಲ್ಲಹಳ್ಳಿಯ ರಾಜಮ್ಮ (50) ಅವರ ಬಲಗೈ ಗೆ ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ಬು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ. ಲಾರಿ ಚಾಲಕನ ವಿರುದ್ದ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್ಐ.ಆರ್ ದಾಖಲಾಗಿದೆ.
ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ.
ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.