ಸರ್ಕಾರಿ ಅಧಿಕಾರಿಯೊಬ್ಬ ಮುಂಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿರುವುದು ಸಾಬೀತಾದ ಹಿನ್ನಲೆಯಲ್ಲಿ ಆತನನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಈ ಹಿಂದೆ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಸಾಂಖ್ಯಿಕ ನಿರೀಕ್ಷಕರಾಗಿದ್ದ, ಪ್ರಸ್ತುತ ಮೈಸೂರಿನ ಕಚೇರಿಯಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿರುವ ಜೆ.ಪುಟ್ಟರಾಜು ಸೇವೆಯಿಂದ ವಜಾಗೊಂಡ ಅಧಿಕಾರಿ.
ಜೆ.ಪುಟ್ಟರಾಜು ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಬಡ್ತಿ ಪಡೆಯಲು ತಮಿಳುನಾಡಿನ ಕಾರೈಕುಡಿಯ ಅಳಗಪ್ಪ ಯೂನಿವರ್ಸಿಟಿಯ ನಕಲಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಮಂಡ್ಯದ ಪೂರ್ವ ಪೋಲಿಸ್ ಠಾಣೆಯಲ್ಲಿ 2020 ರಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಇಲಾಖಾ ವಿಚಾರಣೆ ನಡೆದ ಸಂದರ್ಭದಲ್ಲಿ ಜೆ.ಪುಟ್ಟರಾಜು ಅವರು, ನಕಲಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಹಾಜರುಪಡಿಸಿ, ಸಾಂಖ್ಯಿಕ ನಿರೀಕ್ಷಕರ ಹುದ್ದೆಯಿಂದ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗೆ ಮುಂಬಡ್ತಿ ಪಡೆದಿರುವ ಆರೋಪ ಸಾಬೀತಾಗಿದೆ.
ಈ ಹಿನ್ನಲೆಯಲ್ಲಿ ಮಾಧುರಾಜ್ ಎನ್, ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು ಇವರು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ: 9(1)(ಸಿ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜೆ. ಪುಟ್ಟರಾಜು ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಅ.28ರಂದು ಆದೇಶಿಸಿದ್ದಾರೆ.