ಸುಳ್ಳುಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಇಂದು ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದ ಅವರು, ”ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜೊತೆಜೊತೆಗೆ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು” ಎಂದು ಸೂಚನೆ ನೀಡಿದರು.
”ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆʼ ಎಂದರು.
ʼಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಹುತಾತ್ಮ ಪೊಲೀಸರ ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.
”ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ” ಎಂದು ಹೇಳಿದರು.
”ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು” ಎಂದು ಕರೆ ನೀಡಿದರು.
”ತಂತ್ರಜ್ಞಾನದ ಪ್ರಗತಿಯಿಂದ ಪೊಲೀಸ್ ಇಲಾಖೆಗೆ ಹೊಸ ಸವಾಲುಗಳು ಎದುರಾಗುತ್ತಿದ್ದು, ಸೈಬರ್ ತಂತ್ರಜ್ಞಾನದ ಜತೆಗೆ ಸೈಬರ್ ಅಪರಾಧಗಳೂ ಹೆಚ್ಚುತ್ತಿವೆ, ಇದನ್ನು ಪರಿಣಾಮಕಾರಿಯಾಗಿ ತಡೆಯಬೇಕು” ಎಂದು ಸೂಚನೆ ನೀಡಿದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.