ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮಂಡ್ಯ ಜಿಲ್ಲಾ ಘಟಕ, ಸಂಪೂರ್ಣ ಸಾವಯವ ಕೃಷಿಕರ ಸಂಘ ಮಳವಳ್ಳಿ ಹಾಗೂ ಆರಿ ಗ್ರಾಫ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜುಲೈ 14 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಂಡ್ಯದ ಪಿಇಎಸ್ ಕಾಲೇಜಿನ ಆವರಣದಲ್ಲಿರುವ ವಿವೇಕಾನಂದ ರಂಗಮಂದಿರದಲ್ಲಿ ಕೃಷಿಕರ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ವನ ಕೃಷಿ ಬೆಳೆಗಾರರ ಸಂಘದ ಅನಂತರಾವ್ ಕೆರಗೋಡು ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಗಿಡ ಬೆಳೆಸುವ ಮೂಲಕ ಆಮ್ಲಜನಕವನ್ನು ನೀಡುತ್ತಿದ್ದಾರೆ. ಕಾರ್ಖಾನೆಗಳು ಇಂಗಾಲವನ್ನು ಬಿಡುಗಡೆ ಮಾಡುವ ಮೂಲಕ ವಾತಾವರಣವನ್ನು ಕೆಡಿಸುತ್ತಿದೆ .ಆದ್ದರಿಂದ ಆಮ್ಲಜನಕ ಸೃಷ್ಟಿ ಮಾಡುವ ರೈತರಿಗೆ ಸಹಾಯಧನ ನೀಡುವಂತೆ ಒತ್ತಾಯಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದರು.
ಅಂದು ನಿವೃತ್ತ ಐಎಎಸ್ ಅಧಿಕಾರಿ ಕೆ ಅಮರನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ವಿಶೇಷ ಆಹ್ವಾನಿತರಾಗಿ ಶಾಸಕರಾದ ರವಿಕುಮಾರ್ ಗೌಡ, ಮಧು ಜಿ ಮಾದೇಗೌಡ ,ಜಿಲ್ಲಾಧಿಕಾರಿ ಡಾ. ಕುಮಾರ ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ. ಆದ್ದರಿಂದ ಕೃಷಿಕರು ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕೃಷಿಕರಾದ ಸೋಮಶೇಖರ್, ವೆಂಕಟೇಶ್ ,ಮಂಜು ,ದಯಾನಂದ, ಸ್ವಾಮಿ ,ಚಿಕ್ಕಣ್ಣ ಉಪಸ್ಥಿತರಿದ್ದರು.