ಕರ್ನಾಟಕದ ಮುಖ್ಯಮಂತ್ರಿಯಾಗಿ ಆಳ್ವಿಕೆ ನಡೆಸಿದ ಡಿ.ದೇವರಾಜ ಅರಸರು ಶೋಷಿತರ ಪರ ಹೋರಾಟ ಮಾಡಿದ ಧೀಮಂತ ನಾಯಕ ಎಂದು ಡಿ.ದೇವರಾಜ ಅರಸು ಸಂಸ್ಥೆಯ ಮಾಜಿ ನಿರ್ದೇಶಕ ಪ್ರೊ.ಎನ್.ವಿ. ನರಸಿಂಹಯ್ಯ ಅವರು ತಿಳಿಸಿದರು.
ಮಂಡ್ಯ ನಗರದ ಡಾ.ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಮಾಡಿದರು, ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲಚೇತನರ ವೇತನ, ಉನ್ನತ ವ್ಯಾಸಂಗ ಮಾಡುವ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿದರು.
ಅರಸುರವರು ಗಾಂಧೀಜಿ ಅವರ ಆಶಯದಂತೆ ಉಳುವವನೇ ಭೂಮಿ ಒಡೆಯ ಎಂಬ ಪದ್ಧತಿಯ ಭೂಸುಧಾರಣೆ ಕಾಯ್ದೆ ಜಾರಿಗೆ ತಂದರು.
ಎಲ್. ಜಿ ಹಾವನೂರು ಆಯೋಗ ಕರ್ನಾಟಕ ಇತಿಹಾಸದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗಗಳ ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಆರ್ಥಿಕವಾಗಿ ಸಾಂಸ್ಕೃತಿಕವಾಗಿ ಅತ್ಯಂತ ವೈಜ್ಞಾನಿಕವಾಗಿ ವರ್ಗೀಕರಿಸಿದ ಶ್ರೇಯಸ್ಸು ಎಲ್.ಜಿ ಹಾವನೂರು ಅವರಿಗೆ ಸಲ್ಲುತ್ತದೆ. ಎಲ್.ಜಿ ಹಾವನೂರು ಆಯೋಗದ ವರದಿ ಹಿಂದುಳಿದ ವರ್ಗದ ಬೈಬಲ್ ಎಂದು ದೇವರಾಜ ಅರಸರು ಕರೆದಿದ್ದಾರೆ.ಅವರು ನಮ್ಮೆಲ್ಲರಿಗೂ ಮಾದರಿ ಎಂದರು.
ವಿಚಾರಗೋಷ್ಠಿಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಜಿಲ್ಲಾಧ್ಯಕ್ಷ ಎಲ್. ಸಂದೇಶ್, ಬೂಕನಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಜೆ.ಬಿ. ಮಂಜುನಾಥ್ , ಹಿಂದುಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಬಿ.ರಂಗೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.