Wednesday, September 18, 2024

ಪ್ರಾಯೋಗಿಕ ಆವೃತ್ತಿ

ಮುಸ್ಲಿಮರ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್ ವಿರುದ್ಧ ಎಫ್‌ಐಆರ್

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯ ಬಗ್ಗೆ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ್ದ ಬೆಳವಣಿಗೆಗೆ ಸಂಬಂಧಿಸಿದಂತೆ ಏಷ್ಯಾ ನೆಟ್ ಸುವರ್ಣ ನ್ಯೂಸ್ ಕನ್ನಡ ಸುದ್ದಿವಾಹಿನಿ ಹಾಗೂ ಆ್ಯಂಕರ್ ಅಜಿತ್ ಹನುಮಕ್ಕನವರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್‌ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬೆಳವಣಿಗೆ?

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಿಡುಗಡೆಗೊಂಡಿದೆ. ಈ ವರದಿಯು ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು.

ಈ ವರದಿಯನ್ನು ಆಧರಿಸಿ ಕನ್ನಡದ ಸುದ್ದಿವಾಹಿನಿ ಸುವರ್ಣ ನ್ಯೂಸ್ ಕನ್ನಡ ಚಾನೆಲ್‌ನಲ್ಲೂ ಕೂಡ ಮೇ 9, 2024 ಗುರುವಾರ ಕಾರ್ಯಕ್ರಮವೊಂದು ಪ್ರಸಾರವಾಗಿದೆ.

ಮೇ 9ರ ರಾತ್ರಿ 8.30ಕ್ಕೆ ಪ್ರಸಾರಗೊಂಡಿರುವ ಈ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್‌ನ ಅಜಿತ್ ಹನುಮಕ್ಕನವರ್ ನಿರೂಪಿಸುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ಕಂಡುಬಂದಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೇರ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ವಿಷಾದ ವ್ಯಕ್ತಪಡಿಸಿದ್ದ ಚಾನೆಲ್

ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಬಿಂಬಿಸುವ ಗ್ರಾಫಿಕ್ ಬಳಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸುದ್ದಿ ವಾಹಿನಿಯು ವಿಷಾದ ವ್ಯಕ್ತಪಡಿಸಿತ್ತು.

“ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದ ಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸುವರ್ಣ ನ್ಯೂಸ್ ತಿಳಿಸಿತ್ತು.

ಎಪಿಸಿಆರ್ ಕರ್ನಾಟಕ ವತಿಯಿಂದಲೂ ದೂರು

ಭಾರತದ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ ಏಷ್ಯಾ ನೆಟ್ ಸುವರ್ಣ ನ್ಯೂಸ್ ವಿರುದ್ಧ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌(ಎಪಿಸಿಆರ್) ಕರ್ನಾಟಕ ಘಟಕವೂ ಕೂಡ ಬೆಂಗಳೂರಿನ ಅಸಿಸ್ಟೆಂಟ್ ಕಮಿಷನರ್‌ಗೆ ದೂರು ಸಲ್ಲಿಸಿತ್ತು.

ಸೈಬರ್ ಕ್ರೈಂ ಪೊಲೀಸರಿಗೂ ಕೂಡ ದೂರು

ಸುದ್ದಿ ನಿರೂಪಣಾ ಕಾರ್ಯಕ್ರಮವೊಂದರಲ್ಲಿ ಹಿಂದೂಗಳಿಗೆ ತ್ರಿವರ್ಣ ಧ್ವಜ ಮತ್ತು ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಖಾಸಗಿ ಸುದ್ದಿ ವಾಹಿನಿ ಮತ್ತು ಅದರ ಸಂಪಾದಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಕೀಲರಾದ ಸಂಪತ್‍ಕುಮಾರ್ ಪಿ. ಎಂಬುವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ಮೇ 9ರ ರಾತ್ರಿ 8.30ರಲ್ಲಿ ಏಷ್ಯಾ ನೆಟ್ ಸುವರ್ಣ ನ್ಯೂಸ್ ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡಿರುವ ಕಾರ್ಯಕ್ರಮದ ಸುದ್ದಿ ನಿರೂಪಣೆ ವೇಳೆಯಲ್ಲಿ ಪತ್ರಕರ್ತ ಅಜಿತ್ ಹನಮಕ್ಕನವರ್ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ, ಭಾರತೀಯ ಮುಸ್ಲಿಮರ ಜನಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪತ್ರಕರ್ತ ಅಜಿತ್ ಹನಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ ಸುದ್ದಿ ಪ್ರಸಾರ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ವ್ಯಾಪಕವಾಗಿ ಪ್ರಚಾರವಾಗಿದ್ದು, ದೇಶದ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಷಡ್ಯಂತ್ರವಾಗಿದೆ. ಪಾಕಿಸ್ತಾನದ ಧ್ವಜ ಬಳಸಿ ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಸುದ್ದಿ ಪ್ರಸಾರ ಮಾಡಿ ದೇಶದ ಸಾರ್ವಭೌಮತೆ ಮತ್ತು ಐಕ್ಯತೆಗೆ ಧಕ್ಕೆ ತಂದಿರುವ ಅಜಿತ್ ಹನುಮಕ್ಕನವರ್ ಮತ್ತು ಸುವರ್ಣ ಸುದ್ದಿವಾಹಿನಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!