ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ನಡೆದ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯಭೇರಿ ಭಾರಿಸುವುದರ ಜೊತೆಗೆ ಮೈತ್ರಿಗೆ ಅಕ್ಷರಶಃ ಸೋಲುಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್ನ ಕೋಮುವಾದಿ ಅವತಾರಕ್ಕೆ ಮತದಾರರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದ್ಧಾರೆ.
ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದದ ನಂತರವು ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.
ಕುಟುಂಬದ ಹಿತಕ್ಕಾಗಿ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ.
ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಅವರು ಲೇವಡಿ ಮಾಡಿದ್ದಾರೆ.