ಕನ್ನಡ ನಾಡು-ನುಡಿಯ ಏಳಿಗೆ, ಅಭಿವೃದ್ಧಿ ಹಾಗೂ ಅಭ್ಯುದಯಕ್ಕಾಗಿ ಪ್ರತಿಯೊಬ್ಬ ನಾಗರೀಕರು ದುಡಿಯಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ಮಂಡ್ಯದ ಜಿಲ್ಲಾಧಿಕಾರಿಗಳ ನಿವಾಸದ ಬಳಿ ಜಿಲ್ಲಾಡಳಿತದ ವತಿಯಿಂದ ನಡೆದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಲಂಕೃತ ಜೈ ಭುವನೇಶ್ವರಿ ಮಾತೆಯ ಒಳಗೊಂಡ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡ ಪ್ರಾಚೀನ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹಾಗೂ ಪ್ರಾಮುಖ್ಯತೆ ಹೊಂದಿದೆ ಎಂದರು.
ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗಳು ದೊರತಿದೆ. ನಮ್ಮ ಆಡಳಿತ ಭಾಷೆ ಕನ್ನಡವಾಗಿದ್ದು, ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ಕನ್ನಡವನ್ನು ಬಳಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪ ವಿಭಾಗಾಧಿಕಾರಿ ಐಶ್ವರ್ಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.