ಕರ್ನಾಟಕ ಸಂಘದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭವು ಜೂ.30ರಂದು ಮಂಡ್ಯನಗರದ ರೈತ ಸಭಾಂಗಣದಲ್ಲಿ ನಡೆಯಲಿದ್ದು, ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದರು.
ಕರ್ನಾಟಕ ಸರ್ಕಾರ ಇದುವರೆಗೂ ನಾಲ್ವಡಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿಲ್ಲ. ಆದ ಕಾರಣ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು .ನಾಲ್ವಡಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಸಾಂಸ್ಕೃತಿಕ ನೆಲಗಟ್ಟಿಗೆ ಬೇಕಾದ ರಂಗಮಂದಿರವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಅಂದಿನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥ ಮಹಾಸ್ವಾಮಿಜಿ ವಹಿಸುವರು. ಕೊಮ್ಮೆರಹಳ್ಳಿ ವಿಶ್ವಮಾನವ ಕ್ಷೇತ್ರದ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸುವರು ಎಂದರು.
ಶಾಸಕ ರವಿಕುಮಾರ್ ಗೌಡ ಅಧ್ಯಕ್ಷತೆ ವಹಿಸುವರು. ಹಿಂದುಳಿದ ವರ್ಗಗಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಡಾ.ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಚಿವ ಸಿ ಎಸ್ ಪುಟ್ಟರಾಜು ನಾಲ್ವಡಿ ಅವರ ಭಾವಚಿತ್ರವನ್ನು ಅನಾವರಣಗೊಳಿಸುವರು ಎಂದರು.
ಬೆಂಗಳೂರು ಕೇಂದ್ರ ವಲಯದ ಐ.ಜಿ ಡಾ.ಬಿ ಆರ್ ರವಿಕಾಂತೇಗೌಡ ನಾಲ್ವಡಿ ಅವರನ್ನು ಕುರಿತು ಮಾತನಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಭಾಗವಹಿಸಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು .
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮಂಜುಳಾ ಉದಯಶಂಕರ್, ನಾಗಪ್ಪ ಭಾಗವಹಿಸಿದ್ದರು.