ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯ ಹೋರಾಟದಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಭಾಗಿಯಾಗಿ ತ್ಯಾಗ,ಬಲಿದಾನ ಮಾಡಿದ್ದು,ಇಂತಹ ಕಾಂಗ್ರೆಸ್ ಪಕ್ಷದ ಬಗ್ಗೆ ವಿರೋಧ ಪಕ್ಷಗಳಿಂದ ಕಲಿಯುವುದೇನೂ ಇಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಸಂತೇಮಾಳದಲ್ಲಿ ಕಾಂಗ್ರೆಸ್ ಪಕ್ಷದಿಂದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರು,ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಂದುಗೂಡಿ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ಮಾಡಲಾಗುತ್ತಿದೆ. ದೇಶಕ್ಕಾಗಿ ಕಾಂಗ್ರೆಸ್,ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್, ಭವಿಷ್ಯಕ್ಕಾಗಿ ಕಾಂಗ್ರೆಸ್ ಎಂಬ ಘೋಷವಾಕ್ಯದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯು ಕಿರುಗಾವಲು ಸಂತೆಮೈದಾನದಿಂದ ಆರಂಭವಾಗಿ ಮಳವಳ್ಳಿ ಪಟ್ಟಣದವರೆಗೆ ನಡೆಯಲಿದೆ ಎಂದು ತಿಳಿಸಿದರು.
ವಿರೋಧಪಕ್ಷಗಳು ಪಾದಯಾತ್ರೆ ಬಗ್ಗೆ ವ್ಯಂಗ್ಯ ಮಾಡುತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರದ ಬಗ್ಗೆ ಅರಿವಿಲ್ಲದವರು, ಜವಾಬ್ದಾರಿ ಗೊತ್ತಿಲ್ಲದವರು, ಸ್ವಾತಂತ್ರ್ಯ ಹೋರಾಟದಲ್ಲಿ ಪಾತ್ರವಿಲ್ಲದ ಪಕ್ಷದ ನಾಯಕರಿಗೆ ವ್ಯಂಗ್ಯ ಮಾಡುವುದನ್ನು ಬಿಟ್ಟು ಇನ್ನೇನು ಮಾಡಲು ಸಾಧ್ಯ. ಡೋಂಗಿ ಬಿಜೆಪಿ, ಜೆಡಿಎಸ್ ನಾಯಕರಿಂದ ಕಾಂಗ್ರೆಸ್ ಪಾಠ ಕಲಿಯುವ ಅಗತ್ಯವಿಲ್ಲ.ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಹಲವು ನಾಯಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಭವಿಷ್ಯದಲ್ಲಿ ದೇಶ ಕಟ್ಟುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.
ಪಾದಯಾತ್ರೆಯಲ್ಲಿ ಪೂಜಾಕುಣಿತ,ಡೊಳ್ಳುಕುಣಿತ,ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು.ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಬಾವುಟ ಹಿಡಿದು ಸಂಭ್ರಮದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಡದಪುರ ಶಿವಣ್ಣ,ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಕಾಂಗ್ರೆಸ್ ಮುಖಂಡರಾದ ಡಾ. ಕೃಷ್ಣ, ಡಾ. ರವೀಂದ್ರ,ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರ ರಾಜು, ಜಿ.ಪಂ. ಮಾಜಿ ಸದಸ್ಯರಾದ ತ್ಯಾಗರಾಜು,ಆರ್.ಎನ್. ವಿಶ್ವಾಸ್,ಸುಜಾತ ಪುಟ್ಟು,ಚಂದ್ರುಕುಮಾರ್,ಸುರೇಶ್ ಕಂಠಿ,ಯುವ ಕಾಂಗ್ರೆಸ್ ಅಧ್ಯಕ್ಷ ಹುಸ್ಕೂರು ಕೃಷ್ಣಮೂರ್ತಿ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿದ್ದರು.