ಕರ್ನಾಟಕ ರಾಜ್ಯ ರೈತಸಂಘ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳು ಒಗ್ಗೂಡಿ ಸ್ಥಾಪಿಸಿರುವ ಸರ್ವೋದಯ ಕರ್ನಾಟಕ ಪಕ್ಷವು ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ಪಟ್ಟಿ ಬಿಡುಗಡೆ ಮಾಡಿದೆ.
ಸೋಮವಾರ(ಇಂದು) ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಸ್ಕೌ ಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಬಸಪ್ಪ ಸಮುದಾಯ ಭವನದದಲ್ಲಿ ನಡೆದ ಸರ್ವೋದಯ ಕರ್ನಾಟಕ ಪಕ್ಷದ ಚಾಲನಾ ಸಮಾರಂಭದಲ್ಲಿ ಈ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ರೈತಸಂಘದ ಯುವ ನಾಯಕರಿಗೆ ಅವಕಾಶ ನೀಡಲಾಗಿದೆ.
ಮಂಡ್ಯದಿಂದ ಎಸ್.ಸಿ.ಮಧುಚಂದನ್ – ಮೇಲುಕೋಟೆಯಿಂದ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯನ್ನಾಗಿ ಎಸ್.ಸಿ.ಮಧುಚಂದನ್ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ದರ್ಶನ್ ಪುಟ್ಟಣ್ಣಯ್ಯ ಅವರ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ಮಧುಚಂದನ್ ಮಂಡ್ಯದಲ್ಲಿ ಹಲವಾರು ರೈತಪರ ಹೋರಾಟಗಳನ್ನು ಮಾಡಿಕೊಂಡು ಸಂಘಟನೆಗೆ ಒತ್ತು ನೀಡುತ್ತಿದ್ಧಾರೆ, ರೈತ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮಿಸುತ್ತಿದ್ದಾರೆ. ಮತ್ತೊಂದೆಡೆ ಅರ್ಗ್ಯಾನಿಕ್ ಮಂಡ್ಯ ಕಂಪನಿಯನ್ನು ಸ್ಥಾಪಿಸಿ, ಒಂದಷ್ಟು ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಸಮಾಜಸೇವೆಯಲ್ಲಿ ನಿರತರಾಗಿದ್ದಾರೆ.
ಇನ್ನು ಮೇಲುಕೋಟೆಯಲ್ಲಿ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯ ನಿಧನರಾದ ನಂತರ, ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರೇ ಉತ್ತರಾಧಿಕಾರಿಯಾಗಿ ಹೊರ ಹೊಮ್ಮಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲೆಬೇಕೆಂಬ ಹುಮ್ಮಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.