ಶ್ರೀಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 1 ರಂದು ವೈರಮುಡಿ ಕಿರೀಟಧಾರಣೆ ನಡೆಯಲಿದೆ. ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಕುಡಿಯುವ ನೀರಿನ ಟ್ಯಾಂಕರ್ ಗಳು ಅಗತ್ಯತೆಗೆ ತಕ್ಕಂತೆ ವ್ಯವಸ್ಥೆಯಾಗಿದೆ. ಬಿಸಿಲು ಹೆಚ್ಚಿರುವುದರಿಂದ ಟ್ಯಾಂಕರ್ ಖಾಲಿಯಾದ ನಂತರ ಮರುಪೂರ್ಣವಾಗುವ ರೀತಿ ನೋಡಿಕೊಳ್ಳಲಾಗಿದೆ. ಶೌಚಾಲಯ, ವಾಹನ ನಿಲುಗಡೆ, ವಯಸ್ಸಾದವರು ಹಾಗೂ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವಾಹನದ ಮಾಡಲಾಗಿದೆ ಎಂದರು.
ಏ.1ರಂದು ವೈರಮುಡಿ ಕಿರೀಟ ಧಾರಣೆ ಮಹೋತ್ಸವ ನಡೆಯಲಿದೆ. ರಾಜಮುಡಿ ಹಾಗೂ ವೈರಮುಡಿಯನ್ನು ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ತೆಗೆದುಕೊಂಡು ಹೋಗುವಾಗ ಮಾರ್ಗದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾರೆ. ಇದಕ್ಕೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಜಿಲ್ಲಾ ಖಜಾನೆಯಿಂದ, ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಸ್ಥಾನ, ಇಂಡುವಾಳು, ತೂಬಿನಕೆರೆ, ಗಣಂಗೂರು, ಶೆಟ್ಟಿಹಳ್ಳಿ, ಕಿರಂಗೂರು ಬನ್ನಿಮಂಟಪ, ಕೂಡಲಕುಪ್ಪೆ ಗೇಟ್, ದರಸಗುಕುಪ್ಪೆ, ಪಾಂಡವಪುರ ರೈಲ್ವೆ ನಿಲ್ದಾಣ, ಕೆನ್ನಾಳು, ಪಾಂಡವಪುರ, ಹಿರೇಮರಳಿ ಗೇಟ್, ಬಣಘಟ್ಟ, ಟಿ.ಎಸ್.ಛತ್ರ,, ಮಹದೇಶ್ವರ ಪುರ, ಬೆಳ್ಳಾಳೆ, ಜಕ್ಕನಹಳ್ಳಿ, ತಗಲಕೆರೆ ಮೂಲಕ ಮೇಲುಕೋಟೆ ತಲುಪಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ವಾರ್ತಾಧಿಕಾರಿ ಎಸ್ ಹೆಚ್ ನಿರ್ಮಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.