ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಸಿದ್ದರಾಮಯ್ಯ ಪರ್ವ ಆರಂಭವಾಗಲಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30 ಕ್ಕೆ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾಗಿ ಎಂಟು ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಡ ರಾತ್ರಿಯವರೆಗೂ ಕಸರತ್ತು ನಡೆಸಿ,ಸರ್ಕಾರದ ಸಚಿವ ಸಂಪುಟಕ್ಕೆ ಸೇರುವ ಎಂಟು ಮಂದಿ ಶಾಸಕರ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಇಂದು ಡಾ:ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
2013 ರಲ್ಲಿಯೂ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಯೇ ಅಧಿಕಾರ ಸ್ವೀಕರಿಸಿದ್ದರು.ಈ ಬಾರಿಯೂ ಕಂಠೀರವ ಕ್ರೀಡಾಂಗಣದಲ್ಲಿಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ,ಡಿಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಪದಗ್ರಹಣ ಸಮಾರಂಭಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು,ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.2000ಕ್ಕೂ ಹೆಚ್ಚು ಪೋಲಿಸ್ ಪಡೆಯನ್ನು ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ.
ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಆಗಮಿಸಿದ್ದಾರೆ. ಕಂಠೀರವ ಕ್ರೀಡಾಂಗಣ ಜನರಿಂದ ತುಂಬಿ ಹೋಗಿದ್ದು, ಇನ್ನೂ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಲೇ ಇದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ,ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಆಗಮಿಸಿದ್ದು,ಇನ್ನೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.