ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾಢಳಿತ ವತಿಯಿಂದ ಪೂರ್ವಸಿದ್ದತೆ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗ ಕಾರ್ಯಕ್ರಮದ ವೇದಿಕೆಯ ಪೂರ್ವಸಿದ್ದತೆಗಳನ್ನು ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಪರೀಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.18ರಂದು ಮಳವಳ್ಳಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ವತಿಯಿಂದ ಎಲ್ಲಾ ಕಾರ್ಯಕ್ರಮದ ಪೂರ್ವಸಿದ್ದತೆಗಳನ್ನು ಮಾಡಿಕೊಂಡಿದೆ ಎಂದರು.
50 ಸಾವಿರ ಜನ ಆಗಮನ
ಈ ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಲ್ಲರಿಗೂ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಿದ್ದೇವೆ, ಸರ್ಕಾರದ ವಿವಿಧ ಯೋಜನೆಗಳ ಕಾರ್ಯಕ್ರಮಗಳನ್ನು ಕುರಿತು ಅರಿವು ಮೂಡಿಸಲು 40 ಮಳಿಗೆಗಳನ್ನು ಸ್ಥಾಪಿಸಿ ಸಾರ್ವಜನಿರಿಗೆ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಅರ್ಥಪೂರ್ಣವಾಗಿ ನಡೆಸಲು ಎಲ್ಲಾ ಪೂರ್ವಸಿದ್ದತೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪೊಲೀಸ್ ಬಂದೋಬಸ್ತ್
ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಸ್ಥಳ ಸೇರಿದಂತೆ ಪಟ್ಟಣಾಧ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ, ಎಸ್ಪಿ ಯತೀಶ್ ನೇತೃತ್ವದಲ್ಲಿ ಇಬ್ಬರು ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿಗಳು, 7ಡಿವೈಎಸ್ಪಿ, 23 ಸರ್ಕಲ್ ಇನ್ಸ್ಪೇಕ್ಟರ್, 65 ಪಿಎಸ್ಐ, 75 ಎಎಸ್ಐ,750ಪೊಲೀಸ್ ಸಿಬ್ಬಂದಿ, 5 ಕೆಎಸ್ಆರ್ಪಿಸಿ ತುಕ್ಕಡಿ, 7 ಡಿಆರ್ ಪೊಲೀಸ್ ಸೇರಿದಂತೆ 1100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಬ್ಯಾನರ್ ಅಬ್ಬರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಇದೇ ಮೊದಲ ಭಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣಕ್ಕೆ ಹೊಸ ರೂಪ ನೀಡಲಾಗಿದೆ, ಪ್ರಮುಖವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಮುಖ್ಯಮಂತ್ರಿಗಳಿಗೆ ಶುಭಕೋರಿ ಆಳವಡಿಸಿರುವ ಬ್ಯಾನರ್ಗಳು ರಾರಾಜಿಸುತ್ತೀವೆ.
ಗ್ಯಾರಂಟಿಯಿಂದ ನೆಮ್ಮದಿ ಬದುಕು
ಶಾಸಕ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ, ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸರ್ಕಾರದ ಸಾಧನೆಯನ್ನು ಮೆಚ್ಚಿ ೬೦ರಿಂದ ೭೦ ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆಂಬ ನಿರೀಕ್ಷೆಯನ್ನು ಹೊಂದಲಾಗಿದೆ, ವಿವಿಧ ಇಲಾಖೆಗಳಿಂದ ೪೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಿ ರೈತರು ಹಾಗೂ ಸಾರ್ವಜನಿಕರಿಗೆ ಬೇಕಾದ ಮಾಹಿತಿಯನ್ನು ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ನೂರಕ್ಕೂ ಹೆಚ್ಚು ಕೌಂಟರ್
ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳ ಊಟದ ವ್ಯವಸ್ಥೆಗಾಗಿ ನೂರಕ್ಕೂ ಹೆಚ್ಚು ಕೌಂಟರ್ ತೆರೆಯಲಾಗಿದೆ, ಕುಡಿಯುವ ನೀರು, ಮಜ್ಜಿಗೆ ಸಮರ್ಪಕವಾಗಿ ವಿತರಿಸಲಾಗುವುದು, ಕೃತಕ ಶೌಚಾಲಯದ ಸೌಲಭ್ಯವನ್ನು ಕಲ್ಪಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಹಲವು ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿನೀರಾವರಿ ಪ್ರಾತ್ಯಾಕ್ಷತೆ ಹಮ್ಮಿಕೊಳ್ಳಲಾಗಿದೆ, ಅಶ್ವಮೇಧ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾಪಂಚಾಯಿತಿ ಸಿಇಓ ಶೇಖ್ ತನ್ವೀರ್ ಆಸಿಫ್, ಅಪಾರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ. ತಹಶೀಲ್ದಾರ್ ಕೆ.ಎನ್ ಲೊಕೇಶ್, ಡಿವೈಎಸ್ಪಿ ಕೃಷ್ಣಪ್ಪ ತಾ.ಪಂ ಇಓ ಎಲ್ ಮಮತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.