Tuesday, September 17, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸೆ.14 ,15ರಂದು ಗಗನಚುಕ್ಕಿ ಜಲಪಾತೋತ್ಸವ: ನರೇಂದ್ರಸ್ವಾಮಿ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಳವಳ್ಳಿ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 14 ರಂದು ಮುಖ್ಯಮಂತ್ರಿಗಳು ಜಲಪಾತೋತ್ಸವ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು.

ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದರು.

ಎರಡು ದಿನಗಳ ಕಾಲ ನಡೆಯುವ ಗಗನಚುಕ್ಕಿ ಜಲಪಾತೋತ್ಸವದ ಹಿನ್ನಲೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಊಟದ ವ್ಯವಸ್ಥೆ ಮಾಡಲಾಗಿದೆ. ಪರಿಸರದ ಸೌಂದರ್ಯ ಸವಿಯುವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಿಗ್ಗೆಯಿಂದ ರಾತ್ರಿಯವರೆಗೆ ಇರುತ್ತದೆ ಎಂದರು.

ಗಗನಚುಕ್ಕಿಯನ್ನು ಬೃಹತ್ ಆಕರ್ಷಣೀಯ ಕೇಂದ್ರವನ್ನಾಗಿಸಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಇಲ್ಲಿ ಸಿಗುವ ಸೌಲಭ್ಯದೊಂದಿಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ ಹಲವಾರು ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದರು.

ಏಷಿಯಾದಲ್ಲೇ ಮೊದಲು ಜಲ ವಿದ್ಯುತ್ ಉತ್ಪಾದನೆ ಮಾಡಿದ ಹೆಗ್ಗಳಿಕೆ ಶಿವನಸಮುದ್ರ ವಿದ್ಯುತ್ ಕೇಂದ್ರಕ್ಕೆ ಸಲ್ಲುತ್ತದೆ. ಮೈಸೂರು-ಮಂಡ್ಯ- ಚಾಮರಾಜನಗರ ಜಿಲ್ಲೆಗಳಲ್ಲಿ ಇರುವ ಪ್ರವಾಸಿ ಸ್ಥಳಗಳ ಪ್ರವಾಸಿ ಸರ್ಕೂಟ್ ರಚಿಸಬೇಕು. ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸಾಕು ಪ್ರಾಣಿಗಳ  ಸಂಗ್ರಹಾಲಯ, ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಚಿಂತಿಸಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದ್ದು, ಬೆಳಗಿನ ಕಾರ್ಯಕ್ರಮವನ್ನು ಸ್ಥಳೀಯ ಕಲಾವಿದರಿಗೆ ನೀಡಲಾಗಿದೆ ಎಂದರು.

ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15 ರಂದು ಕಾರ್ಯಕ್ರಮ ನೀಡುತ್ತಿದ್ದಾರೆ ಎಂದ ಅವರು ಕಾರ್ಯಕ್ರಮದ ವಿವರ ನೀಡಿದರು.

ಸೆಪ್ಟೆಂಬರ್ 14 ರಂದು ಶನಿವಾರ ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳ ಕಾರ್ಯಕ್ರಮ ನಡೆಯಲಿದೆ ಎಂದರು.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ, ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ.

15 ರಂದು ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ, ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಲೋಗೋವನ್ನು ಶಾಸಕರು ಅನಾವರಣಗಳಿಸಿದರು.

ಗೋಷ್ಠಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!