ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಪಿ ರವಿಕುಮಾರ್ ಗೌಡ ರವರ ಬಿ ಫಾರ್ಮ್ ಅನ್ನು ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿ ಗೌಡ ರವರು ಸ್ವೀಕರಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಗಳ ವಿಚಾರ ಇಂದು ಅಂತಿಮ ಹಂತಕ್ಕೆ ಬಂದಿದೆ.
ಕಾಂಗ್ರೆಸ್ ಪಕ್ಷ ಎರಡನೇ ಪಟ್ಟಿಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ಪಿ.ರವಿಕುಮಾರ್ ಹೆಸರನ್ನು ಬಿಡುಗಡೆ ಮಾಡಿತ್ತು. ಆದರೆ ರವಿಕುಮಾರ್ ಗೆ ಬಿ ಪಾರಂ ನೀಡಿರಲಿಲ್ಲ.
ಜೆಡಿಎಸ್-ಬಿಜೆಪಿ ಪಕ್ಷಗಳ ಅಭ್ಯರ್ಥಿಗಳ ನಡೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಿಂದ ಯಾವ ಅಭ್ಯರ್ಥಿಗೆ ಬಿ ಫಾರಂ ನೀಡಬೇಕು ಎಂದುb ಅಧಿಕೃತವಾಗಿ ಘೋಷಿಸಿರಲಿಲ್ಲ.
ಮಂಡ್ಯದಲ್ಲಿ ಕಾಂಗ್ರೆಸ್ ಟಿಕೆಟ್ ಏಕೆ ನೀಡಿಲ್ಲ, ಬಿ ಫಾರಂ ಅಭ್ಯರ್ಥಿಗೆ ತಲುಪಿಲ್ಲ ಎಂಬ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕೀಯದಲ್ಲಿ ಚೆಸ್ ಆಟ ನಡೆಯುತ್ತಿದೆ, ಅವರು ಚೆಸ್ ಆಡುತ್ತಿದ್ದಾರೆ, ನಾವು ಅದೇ ರೀತಿ ಚೆಜ್ ಆಟವನ್ನು ಆಡುತ್ತಿದ್ದೇವೆ. ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು 16 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಗಣಿಗ ರವಿಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಮತ್ತೊಂದು ಅವಕಾಶ ನೀಡಿದೆ.