ಗೃಹ ಜ್ಯೋತಿ ಯೋಜನೆಯಡಿ ರಾಜ್ಯ ಸರ್ಕಾರ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಗ್ಯಾರಂಟಿ ನೀಡಿ ಈಗ ಬಳಕೆಗಿಂತ ಶೇ.10ರಷ್ಟು ಮಾತ್ರ ವಿದ್ಯುತ್ ನೀಡುವುದಾಗಿ ಯೋಜನೆ ರೂಪಿಸಿರುವ ಕ್ರಮವನ್ನು ವಿರೋಧಿಸಿ ಜೂ. 27ರಂದು ಗಂಜಿ ಕುಡಿಯುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಎನ್.ನಾಗರಾಜು ತಿಳಿಸಿದರು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಕಚೇರಿ ಆವರಣದಲ್ಲಿ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸಕರ್ಾರ ನೀಡಿದ್ದ ಗ್ಯಾರಂಟಿ ಯೋಜನೆಯನ್ವಯ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಬೇಕು. ರೈತರ ಪಂಪ್ ಸೆಟ್ ಗಳಿಗೂ ಸಹ ಉಚಿತ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಬಡವರಿಗೆ ವಿತರಿಸುವ ಪಡಿತರ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿದ್ದು, ತಕ್ಷಣದಿಂದಲೇ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ನೀಡಬೇಕು. ಪಡಿತರ ಪದಾರ್ಥ ಪಡೆಯುವ ಚೀಟಿದಾರರಿಗೆ ಹೆಬ್ಬೆಟ್ಟು ಪಡೆಯುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಹಾಲಿಗೆ 5 ರೂ.ಗಳನ್ನು ವರ್ಷದಿಂದಲೂ ನೀಡಿಲ್ಲ. ಈಗಾಗಲೇ ಉತ್ಪಾದಕರು ತೊಂದರೆ ಅನುಭವಿಸುತ್ತಿದ್ದಾರೆ. ಅವರ ನೆರವಿಗೆ ಧಾವಿಸುವ ಮೂಲಕ ಶೀಘ್ರ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮಾಡುವಂತಹ ಕೂಲಿಕಾರರಿಗೆ 600 ರೂ. ನೀಡಬೇಕು. ಕೇಂದ್ರ ಸರ್ಕಾರ ಈಗಾಗಲೇ 360 ರೂ.ನೀಡುತ್ತಿದೆ. ರಾಜ್ಯ ಸರ್ಕಾರ 420 ರೂ. ಕೊಡಬಹುದು ಎಂದು ಹೇಳಿದ್ದರೂ, ಅನುಷ್ಠಾನಗೊಳಿಸಿಲ್ಲ. ಉಳಿಕೆ 119ರೂ.ಗಳನ್ನಾದರೂ ನೀಡಿ ಕೃಷಿ ಕೂಲಿಕಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಂದಿನ ಪ್ರತಿಭಟನೆಯಲ್ಲಿ ಒತ್ತಾಯಿಸಲಾಗುವುದು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೂ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ತರುವುದಾಗಿ ವಾಗ್ದಾನ ಮಾಡಿದ್ದರು. ಮಾತು ಕೊಟ್ಟಂತೆ ಜನರಿಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಯಾವುದೇ ಷರತ್ತುಗಳನ್ನು ವಿಧಿಸದೆ ಹೇಳಿದಂತೆ ನಡೆದುಕೊಳ್ಳಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಹನುಮೇಶ್, ಮುಖಂಡರಾದ ಬಿ.ಎಂ.ಶಿವಮಲ್ಲಯ್ಯ, ಹನುಮೇಗೌಡ, ಮಂಚೇಗೌಡ ಸರೋಜಮ್ಮ, ಅರುಣ್ಕುಮಾರ್, ಅಮಾಸಯ್ಯ, ಮಧುಕುಮಾರ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.