ಚಿತ್ರದುರ್ಗದಲ್ಲಿ ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ನಲ್ಲಿ ಆರೋಪಿಗಳ ಹೆಸರು ಉಲ್ಲೇಖಿಸಲಾಗಿಲ್ಲ.
ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಬೃಹತ್ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆಯ ಚಿತ್ರವನ್ನು ಪ್ರದರ್ಶಿಸಲಾಗಿತ್ತು.
ಈ ಮೆರವಣಿಗೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಕೆ.ಸಿ.ವೀರೇಂದ್ರ ಸೇರಿದಂತೆ ವಿವಿಧ ಮಠಾಧೀಶರು ಕೂಡ ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಕೆಲವರು ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶಿಸಿದ್ದರೆ, ಕೆಲವರು ಶರತ್ ಮಡಿವಾಳ್, ಶಿವಮೊಗ್ಗದ ಹರ್ಷನ ಭಾವಚಿತ್ರ ಪ್ರದರ್ಶಿಸಿದ್ದರು. ಆದರೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.