ರಾಜ್ಯದಾದ್ಯಂತ ವಿವಿಧ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 11,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ತರಗತಿ ಬಹಿಷ್ಕರಿಸಿದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ರಸ್ತೆತಡೆ ನಡೆಸಿದ ಅತಿಥಿ ಉಪನ್ಯಾಸಕರು, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹನ್ನೊಂದು ಸಾವಿರ ಅತಿಥಿ ಉಪನ್ಯಾಸಕರು ಪ್ರಾಮಾಣಿಕ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದು ಸರ್ಕಾರ ಸೇವಾ ಭದ್ರತೆ ಇತರ ಸೌಲಭ್ಯ ನೀಡದಿರುವುದರಿಂದ ಜೀವನ ಸಾಮಾಜಿಕ ಮತ್ತು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದೆ.
ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡುವುದಾಗಿ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಸೇವೆ ಖಾಯಂ ಮಾಡಿ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸಬೇಕು,ಅದೇ ರೀತಿ ಸರ್ಕಾರದ ಸವಲತ್ತುಗಳನ್ನು ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿ.ವಿ ರಮೇಶ್, ಪರಮೇಶ್.ಕೆ, ಡಾ.ಎಂ.ಎಸ್ ಚೆಲುವರಾಜು, ಎಸ್ ಮಂಜು, ಡಾ.ಗಣೇಶ್, ಕುಮಾರ್ ಬಿ.ಆರ್, ರಮ್ಯಾ ಎಸ್ ಆರ್ ನೇತೃತ್ವ ವಹಿಸಿದ್ದರು.