ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಿಂದ ವರ್ಗಾವಣೆಗೊಂಡ ಇಬ್ಬರು ಪ್ರಾಧ್ಯಾಪಕರಿಗೆ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾವುಕರಾಗಿ ಕಣ್ಣೀರು ಸುರಿಸಿ ತಮ್ಮ ಗುರುಗಳನ್ನು ವಿದ್ಯಾರ್ಥಿಗಳು ಬೀಳ್ಕೊಟ್ಟ ಘಟನೆ ನಡೆಯಿತು.
ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ವಿಭಾಗದ ಮುಖ್ಯಸ್ಥರಾಗಿ ಕಳೆದ ಎಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎನ್.ಎಸ್.ಸತೀಶ್ ಅವರು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಹಾಗೂ ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಟಿ.ಲೋಕೇಶ್ ಅವರು ಚಾಮರಾಜನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಪೇಟೆ ತಾಲ್ಲೂಕಿನ ಜನತೆಯ ಪರವಾಗಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.
ಡಾ.ಎನ್.ಎಸ್.ಸತೀಶ್ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಬದ್ಧತೆಯಿಂದ ಕೆಲಸ ಮಾಡಿ ಕಾಲೇಜು ಅತ್ಯುನ್ನತ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಕೊಡುಗೆ ನೀಡಿದ್ದಾರೆ. ಕಾಲೇಜಿನ ಗುಣಮಟ್ಟ ಸುಧಾರಣೆ, ಅತ್ಯುತ್ತಮ ಫಲಿತಾಂಶ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆಂದು ಪುರಸಭಾ ಸದಸ್ಯ ಕೆ.ಆರ್.ನೀಲಕಂಠ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ದಿನೇಶ್, ಶಿಕ್ಷಣ ತಜ್ಞ ಡಾ.ಕೆ.ಕಾಳೇಗೌಡ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.