ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿದೆ. ಅದನ್ನುಅವೈಜ್ಞಾನಿಕ ಎನ್ನುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜು ಹೇಳಿದ್ದಾರೆ.
ಜಾತಿ ಗಣತಿ ಅವೈಜ್ಞಾನಿಕವಾಗಿ ಮಾಡಲಾಗಿದೆ, ಮೂಲ ಪ್ರತಿ ನಾಪತ್ತೆಯಾಗಿದೆ ಇತ್ಯಾದಿ ವಿಷಯಗಳು ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಕಾಂತರಾಜು, ವರದಿಯನ್ನು ನೋಡದೆ ಹೇಳಿಕೆ ನೀಡುವುದು ಸರಿಯಲ್ಲ. ವರದಿ ಬಿಡುಗಡೆಗೂ ಮೊದಲೇ ನಿರ್ಣಯ ಮಾಡುವುದು ಆಗಬಾರದು ಎಂದಿದ್ದಾರೆ.
2015ರಲ್ಲಿ ಹೆಚ್.ಕಾಂತರಾಜು ಅವರು ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಚಾಲನೆ ನೀಡಿತ್ತು. ಈ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಇರುವುದರಿಂದ ವರದಿಯನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.
ಪ್ರಸ್ತುತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜಯ ಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಜಾತಿ ಗಣತಿಯ ವರದಿ ಸಿದ್ದಪಡಿಸಲಾಗ್ತಿದೆ ಎಂಬ ಮಾಹಿತಿ ದೊರೆತಿದೆ. ಈ ನಡುವೆ ಗಣತಿಯ ಮೂಲ ಪ್ರತಿ ನಾಪತ್ತೆಯಾಗಿ ಎಂಬ ವಿಚಾರ ಇತ್ತೀಚೆಗೆ ಮುನ್ನಲೆಗೆ ಬಂದಿತ್ತು.
ಇವೆಲ್ಲದರ ನಡುವೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಮುಖಂಡರು ವರದಿಯನ್ನು ಅವೈಜ್ಞಾನಿಕ ಮತ್ತು ಅಪೂರ್ಣ ಎಂದು ಆರೋಪಿಸಿದ್ದು, ಈ ವರದಿ ಒಪ್ಪಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.