ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಅಷ್ಟೇ ಅಲ್ಲದೇ ಪರಿಸರಕ್ಕೂ ಹಾನಿಕಾರಕ ಎಂದು ಹಿರಿಯ ದಂತ ವೈದ್ಯಾಧಿಕಾರಿ ಡಾ.ಸ್ಮಿತಾ ಜೆ.ಡಿ ಹೇಳಿದರು.
ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಶ್ರೀರಂಗಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಪುರಸಭೆ ಶ್ರೀರಂಗಪಟ್ಟಣ ಹಾಗೂ ಬಿ ಜಿ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಕಾರದೊಂದಿಗೆ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ತಂಬಾಕು ನಿಯಂತ್ರಣಕ್ಕಾಗಿ “ಗುಲಾಬಿ ಆಂದೋಲನ” ಜನ ಜಾಗೃತಿ ಜಾಥ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಆಧುನಿಕ ಯುಗದಲ್ಲಿ ಹದಿ ಹರೆಯದವರು ಹಾಗೂ ಮಹಿಳೆಯರು ತಂಬಾಕು ಸೇವನೆ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ಜಗತ್ತಿನಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಗಂಟೆಗೆ 5 ಜನ ಸಾಯುತ್ತಿದ್ದಾರೆ. ಶೇ 95 ರಷ್ಟು ಬಾಯಿ ಕ್ಯಾನ್ಸರಿಗೆ ತಂಬಾಕು ಸೇವನೆ ಕಾರಣ ಹಾಗಾಗಿ ಇಂದಿನ ಯುವ ಪೀಳಿಗೆ ಯಾವುದೇ ಕಾರಣಕ್ಕೂ ತಂಬಾಕು ಸೇವನೆ ಮಾಡಬೇಡಿ ಇತರರಿಗೂ ವಿಷಯ ತಿಳಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ನಂತರ ಜಾಗೃತಿ ಜಾಥಾಕ್ಕೆ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಪಿ ಮಾರುತಿ ಜಾಲನೆ ನೀಡಿದರು. ಬಳಿಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಪ್ರತಿಜ್ಞಾ ವಿಧಿ ಬೋಧಿಸಿದರು.
ಪಾಲಕರು ಮನೆಯಲ್ಲಿ ತಂಬಾಕು ಬಳಕೆ ಮಾಡುತ್ತಿದ್ದಲ್ಲಿ ವಿದ್ಯಾರ್ಥಿಗಳಿಂದ ಪತ್ರ ಬರೆಯುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಹೆಚ್ ಜೆ ಶ್ರೀಶ ದಾಸ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಬಿ ಹೇಮಣ್ಣ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಬಿ ಮಂಗಳಾ, ಮಹದೇವಮ್ಮ ,ರಬೇಕ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ, ಪಣಿಂದ್ರ, ರಮ್ಯಾ, ಪುರಸಭೆ ಆರೋಗ್ಯ ನಿರೀಕ್ಷಕಿ ಚಂಪಾ ಹಾಗೂ ಆಶಾ ಕಾರ್ಯಕರ್ತೆಯರು, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.