ಕೆಆರ್ಎಸ್ಗೆ ಗಣಿಗಾರಿಕೆಯಿಂದ ಅನಾಹುತ ಸಂಭವಿಸಲಿದೆಯೇ, ಇಲ್ಲವೋ ಎಂಬುದು ಸಾಬೀತಾಗಬೇಕಾದರೆ ಟ್ರಯಲ್ ಬ್ಲಾಸ್ಟ್ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ (ರೈತ ಬಣ)ದ ರಾಜ್ಯಾಧ್ಯಕ್ಷ ಇ.ಎನ್. ಕೃಷ್ಣೇಗೌಡ ಆಗ್ರಹಿಸಿದ್ದಾರೆ.
ಕೆಆರ್ಎಸ್ ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ಟ್ರಯಲ್ ಬ್ಲಾಸ್ಟ್ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕೆಲವರು ರಾಜಕೀಯ ಕಾರಣಕ್ಕಾಗಿ ಟ್ರಯಲ್ ಬ್ಲಾಸ್ಟ್ಗೆ ಅಡ್ಡಿಪಡಿಸುತ್ತಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರುವ ಮುನ್ನವೇ ಅದರ ಸಾಧಕ-ಬಾಧಕಗಳನ್ನು ಕಲ್ಪನೆ ಮಾಡಿಕೊಂಡು ಯಾವುದನ್ನೂ ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಸೋಮವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿದರು.
ಕೆಆರ್ಎಸ್ ಅಣೆಕಟ್ಟೆ ನಿರ್ಮಾಣವಾದಾಗಿನಿಂದಲೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಾರಾಜರ ಕಾಲದಲ್ಲೂ ಕೂಡ ಗಣಿಗಾರಿಕೆ ನಡೆಯುತ್ತಿತ್ತು. ಇದೀಗ ಕನ್ನಂಬಾಡಿ ಕಟ್ಟೆಯ ಸುರಕ್ಷತೆಯಿಂದ ಗಣಿಗಾರಿಕೆ ಸ್ಥಗಿತಗೊಳಿಸಿರುವುದು ಸರಿಯಷ್ಟೆ. ಅದರ ಪರಿಣಾಮ ಹಾಗೂ ದುಷ್ಪರಿಣಾಮಗಳ ಬಗ್ಗೆ ಸತ್ಯಾಸತ್ಯತೆಯನ್ನು ಅರಿಯಲು ಟ್ರಯಲ್ ಬ್ಲಾಸ್ಟ್ ಮಾಡಿ ನೈಜ ವರದಿಯನ್ನು ಸಾರ್ವಜನಿಕವಾಗಿ ಮುಂದಿಡಬೇಕಾಗಿದೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಎಚ್.ಎಸ್. ಚಂದ್ರಶೇಖರ್, ಕೆಂಪರಾಜು ರಾಮೇಗೌಡ, ಮಾಲಿಕ್ ಆವರ್ತಿ, ನಾಗರತ್ನ ಹಾಜರಿದ್ದರು.